ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಚರ್ಚುಗಳು ಹಾಗೂ ಪ್ರಾರ್ಥನಾ ಸಭೆಗಳಿಗೆ ಅಡ್ಡಿಪಡಿಸಿದ ಘಟನೆಗಳು ವರದಿಯಾಗಿವೆ. ಶಾಂತಿ, ಪ್ರೀತಿ ಮತ್ತು ಸಹೋದರತ್ವದ ಸಂದೇಶ ಸಾರುವ ಈ ಹಬ್ಬದ ಸಂಭ್ರಮಕ್ಕೆ ದ್ವೇಷ ರಾಜಕೀಯದಿಂದ ಅಡ್ಡಿ ಉಂಟಾಗಿದೆ ಎಂದು ಕ್ರೈಸ್ತ ಸಂಘಟನೆಗಳು ಆರೋಪಿಸಿವೆ.
ಕ್ರಿಸ್ಮಸ್ ಈವ್ ಮತ್ತು ಕ್ರಿಸ್ಮಸ್ ದಿನದಂದು ಚರ್ಚುಗಳಲ್ಲಿ ನಡೆಯುತ್ತಿದ್ದ ವಿಶೇಷ ಪ್ರಾರ್ಥನೆಗಳು, ಮನೆಗಳಲ್ಲಿ ನಡೆದ ಶಾಂತಿಯುತ ಸಭೆಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಭಾರತದ ಸಂವಿಧಾನದ ಕಲಂ 25ರಂತೆ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧರ್ಮವನ್ನು ಶಾಂತಿಯುತವಾಗಿ ಆಚರಿಸುವ ಹಕ್ಕು ಇದೆ. ಕ್ರಿಸ್ಮಸ್ ಆಚರಣೆಯ ಮೇಲೆ ನಡೆದ ಈ ದಾಳಿಗಳು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿವೆ ಎಂದು ಕ್ರೈಸ್ತ ಸಮುದಾಯದ ಸಂಘಟಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. “ಹಬ್ಬದ ಸಂಭ್ರಮಕ್ಕೆ ಅಡ್ಡಿಪಡಿಸುವುದು ಕಾನೂನುಬಾಹಿರ ಮಾತ್ರವಲ್ಲ, ಸಮಾಜದ ಸಹಬಾಳ್ವೆಗೆ ಧಕ್ಕೆ ತರುತ್ತದೆ” ಎಂದು ತಿಳಿಸಿದ್ದಾರೆ.
ಈ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ, ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆದ ದಾಳಿಗಳು ಜಾತ್ಯಾತೀತತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲಿನ ಗಂಭೀರ ಹಲ್ಲೆಯಾಗಿವೆ. ಕ್ರಿಸ್ಮಸ್ ಶಾಂತಿ ಹಾಗೂ ಸೌಹಾರ್ದತೆಯ ಹಬ್ಬವಾಗಿದ್ದರೂ ಕೇರಳ, ನವದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆಗಳು ಕ್ರೈಸ್ತ ಸಮುದಾಯಕ್ಕೆ ನೋವು ತಂದಿವೆ. ಇಂತಹ ಕೃತ್ಯಗಳು ಆರಾಧನಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಸಂವಿಧಾನ ವಿರೋಧಿ ನಡೆಗಳಾಗಿವೆ. ಅಲ್ಪಸಂಖ್ಯಾತ ಸಮುದಾಯಗಳ ರಕ್ಷಣೆಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು. ಕ್ರೈಸ್ತ ಸಮುದಾಯಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಪ್ರಧಾನಮಂತ್ರಿಗಳು ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಈ ದಿನ.ಕಾಮ್ ಜೊತೆ ಮಾತನಾಡಿದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷರಾದ ಚಾರ್ಲ್ಸ್ ಅಂಬ್ಲರ್ ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧರ್ಮವನ್ನು ಶಾಂತಿಯುತವಾಗಿ ಆಚರಿಸುವ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ. ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಕ್ರೈಸ್ತ ಸಂಸ್ಥೆಗಳ ಮೇಲೆ ನಡೆದ ದಾಳಿಗಳು ಕೇವಲ ಒಂದು ಸಮುದಾಯದ ಮೇಲಿನ ದಾಳಿಯಲ್ಲ, ಅದು ನಮ್ಮ ಸಂವಿಧಾನ ಮತ್ತು ದೇಶದ ಸಮಾವೇಶಾತ್ಮಕ ಮೌಲ್ಯಗಳ ಮೇಲಿನ ನೇರ ದಾಳಿ. ಇಂತಹ ಅಹಿತಕರ ಮತ್ತು ದ್ವೇಷಪ್ರೇರಿತ ಕೃತ್ಯಗಳನ್ನು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ದೇಶದ ಘನತೆ, ಗೌರವ ಮತ್ತು ಸಹಬಾಳ್ವೆಯನ್ನು ಹಾಳುಮಾಡುವ ಯಾವುದೇ ಶಕ್ತಿಗಳಿಗೆ ಅವಕಾಶ ನೀಡಬಾರದು. ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಕಾರ್ಯದರ್ಶಿ ಝಫ್ರುಲ್ಲಾ ಹೂಡೆ ಪ್ರತಿಕ್ರಿಯೆ ನೀಡಿದ್ದು, ಕ್ರಿಸ್ಮಸ್ ಹಬ್ಬದಂತಹ ಪವಿತ್ರ ಸಂದರ್ಭದಲ್ಲಿ ನಡೆದ ಈ ಘಟನೆಗಳು ಸಮಾಜದಲ್ಲಿ ವಿಭಜಕ ಮನೋಭಾವವನ್ನು ಉತ್ತೇಜಿಸುವಂತಿವೆ. ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಇಂತಹ ಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎಲ್ಲಾ ಧರ್ಮಗಳ ಜನರು ಭಯವಿಲ್ಲದೆ ತಮ್ಮ ನಂಬಿಕೆಗಳನ್ನು ಆಚರಿಸುವ ವಾತಾವರಣ ನಿರ್ಮಿಸುವುದು ಆಡಳಿತದ ಕರ್ತವ್ಯ. ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಲ್ಲಿ ಸರ್ಕಾರ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದರು.
ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಡೆನಿಸ್ ಡೆಸಾ ಈ ಕುರಿತು ಮಾಧ್ಯಮ ಹೇಳಿಕೆ ನೀಡಿದ್ದು, ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆದ ದಾಳಿಗಳು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದ್ದು ಇದನ್ನು ಕಥೊಲಿಕ ಧರ್ಮಪ್ರಾಂತ್ಯ ಖಂಡಿಸಿದೆ. ಯೇಸು ಕ್ರಿಸ್ತರು ಸಾರಿದ ಶಾಂತಿ–ಪ್ರೀತಿಯ ಸಂದೇಶಕ್ಕೆ ವಿರುದ್ಧವಾಗಿ ನಡೆದ ಈ ಘಟನೆಗಳು ಹಬ್ಬದ ಸಂಭ್ರಮಕ್ಕೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿವೆ ಎಂದು ಹೇಳಿದರು.
ಕರ್ನಾಟಕ ಸೇರಿದಂತೆ ಕೇರಳ, ದೆಹಲಿ, ಉತ್ತರಪ್ರದೇಶ, ರಾಜಸ್ಥಾನ, ಉತ್ತರಾಖಂಡ, ಒಡಿಶಾ ಮುಂತಾದ ರಾಜ್ಯಗಳಲ್ಲಿ ಕ್ರಿಸ್ಮಸ್ ಆಚರಣೆಯ ವೇಳೆ ಮತಾಂಧರಿಂದ ದಾಳಿ ನಡೆದಿರುವುದು ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಹೇಳಿದೆ. ಅಲ್ಪಸಂಖ್ಯಾತರ ಭದ್ರತೆ ಕುರಿತು ಗಂಭೀರ ಆತಂಕವಿದೆ ಎಂದು ಹೇಳಿದ್ದಾರೆ.
ಇಂತಹ ಸಂವಿಧಾನ ವಿರೋಧಿ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕ್ರೈಸ್ತ ಸಮುದಾಯ ಮತ್ತು ಅವರ ಸಂಸ್ಥೆಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




