ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕಚ್ಚಾಟದ ನಡುವೆಯೇ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ಶಾಂತಿಯುತವಾಗಿ ನೆರವೇರಿತು.
ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ ಶೆಟ್ಟಿ ಅವರ ನೇತೃತ್ವದಲ್ಲಿ ಉಭಯ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆ ಹಾಗೂ ಕಂಬಳದ ಪೋಸ್ಟರ್ ಅನಾವರಣ ಸಮಾರಂಭ ಜರುಗಿತು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿತು.
ಇದಕ್ಕೂ ಮುನ್ನ ಶಂಕುಸ್ಥಾಪನೆ ವಿಚಾರವಾಗಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ನ ಮಾಜಿ ಸಚಿವ ವಿನಯಕುಮಾರ ಸೊರಕೆ ಅವರು ಶಂಕುಸ್ಥಾಪನೆಗೆ ಆಕ್ಷೇಪ ವ್ಯಕ್ತಪಡಿಸಿ, ಮಾರ್ಚ್ 4ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಬೇಕು ಎಂದು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ನಿಷೇಧಾಜ್ಞೆ ಹೇರಿದ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆದಾಗ್ಯೂ ಜಿಲ್ಲಾಡಳಿತದ ಆದೇಶಗಳ ನಡುವೆಯೇ ಯಾವುದೇ ಸದ್ದು-ಗದ್ದಲವಿಲ್ಲದೆ, ಶಾಂತಿಯುತವಾಗಿ ಶಂಕುಸ್ಥಾಪನೆ ನೆರವೇರಿದುದು ಗಮನಾರ್ಹವಾಗಿದೆ.
ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣದಲ್ಲಿ ಇಡಲಾಗಿತ್ತು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಪರಂಪರೆಯ ಕಂಬಳ ಉತ್ಸವಕ್ಕೆ ಚಾಲನೆ ದೊರೆತಿದೆ.





