ಉಡುಪಿ “ಜಿಲ್ಲಾ ಪೊಲೀಸ್ – ನಮ್ಮ ಪೋಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ್ನಸ್”, “ಡ್ರಗ್ಸ್ ಫ್ರೀ ಕರ್ನಾಟಕ” ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ಓಟದ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ನಾಸೀರ್ ಹುಸೇನ್ ಅವರು ಜೋಡುಕಟ್ಟೆಯ ಟಿ.ಎಂ.ಎ. ಪೈ ಆಸ್ಪತ್ರೆ ಎದುರು ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.
ನಾಸೀರ್ ಹುಸೇನ್ ಅವರು ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅಮಾಸೆಬೈಲು, ಕುಂದಾಪುರ, ಬೈಂದೂರು, ಕೊಲ್ಲೂರು ಹಾಗೂ ಶಂಕರನಾರಾಯಣ ಠಾಣೆಗಳಲ್ಲಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸೇವೆ ಸಲ್ಲಿಸಿದ ಎಲ್ಲ ಠಾಣೆಗಳಲ್ಲಿ ಜನಮೆಚ್ಚುಗೆ ಗಳಿಸಿದ್ದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಪೊಲೀಸ್ ವಲಯದಲ್ಲಿ ದುಃಖದ ಛಾಯೆ ಆವರಿಸಿದೆ.





