ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನು ಷರತ್ತು ಪಾಲಿಸದ ಆರೋಪದಲ್ಲಿ ಎಸ್ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು ಇದೀಗ ನ್ಯಾಯಾಲಯವು ಷರತ್ತುಬದ್ದ ಜಾಮೀನು ನೀಡಿದೆ. ನ್ಯಾಯಾಲಯ ನೀಡಿರುವ ಜಾಮೀನು ಷರತ್ತುಗಳ ಪ್ರಕಾರ ರಿಯಾಝ್ ಕಡಂಬುರವರು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ದ್ವೇಷ ಭಾಷಣ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು. ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುವ ತನಿಖೆ ಮತ್ತು ವಿಚಾರಣೆಗೆ ಅವರು ಸಂಪೂರ್ಣ ಸಹಕಾರ ನೀಡಬೇಕು. ಈ ಎರಡು ಷರತ್ತುಗಳಲ್ಲಿ ಯಾವುದನ್ನಾದರೂ ಉಲ್ಲಂಘಿಸಿದರೆ, ಜಾಮೀನು ರದ್ದಾಗುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಎಚ್ಚರಿಸಿದೆ.
ಈ ಹಿಂದೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ರಿಯಾಝ್ ಕಡಂಬು ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದು, ಇದರಲ್ಲಿ 15 ದಿನಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕೆಂಬ ಷರತ್ತು ವಿಧಿಸಲಾಗಿತ್ತು. ಆದರೆ ರಿಯಾಝ್ ಕಡಂಬು ಠಾಣೆಗೆ ಹಾಜರಾಗದೆ ಷರತ್ತನ್ನು ಉಲ್ಲಂಘಿಸಿದ್ದರು.




