ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ವತಿಯಿಂದ ಪೊಲೀಸ್ ಇಲಾಖೆಗೆ ಸಿಎಸ್ಆರ್ ನಿಧಿಯಿಂದ ಒದಗಿಸಿದ ನೂತನ ಬೊಲೇರೋ ವಾಹನದ ಕೀಯನ್ನು ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಒಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು. ನಂತರ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಜೇಂದ್ರಕುಮಾರ್, “ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲೇ ಪೊಲೀಸ್ ಇಲಾಖೆ ಅತ್ಯಂತ ಸವಾಲಿನ ಕಾರ್ಯವ್ಯವಹಾರಗಳನ್ನು ನಿರ್ವಹಿಸುತ್ತದೆ. ಸಾರ್ವಜನಿಕರ ಸುರಕ್ಷತೆ, ಕಾನೂನು-ಸುವ್ಯವಸ್ಥೆ ಕಾಪಾಡುವುದು ಈ ಇಲಾಖೆಯ ದೊಡ್ಡ ಜವಾಬ್ದಾರಿ. ಇಲಾಖೆಯಿಂದ ಬಂದ ಮನವಿಗೆ ಸ್ಪಂದಿಸಿ ಈಗಾಗಲೇ ಎರಡು ವಾಹನಗಳನ್ನು ಒದಗಿಸಿದ್ದೇವೆ. ಇದೇ ಧೋರಣೆಯಲ್ಲಿ ಉಡುಪಿ ಎಸ್ಪಿಯವರ ಮನವಿಗೂ ಸ್ಪಂದಿಸಿ ಈ ಬೊಲೇರೋ ವಾಹನವನ್ನು ನೀಡುತ್ತಿದ್ದೇವೆ” ಎಂದು ಹೇಳಿದರು.

ಅದಕ್ಕೂ ಮೊದಲು ನಡೆದ ಸರಳ ಸಮಾರಂಭದಲ್ಲಿ, ಇಲಾಖೆ ವತಿಯಿಂದ ವಾಹನ ಒದಗಿಸಿದ್ದಕ್ಕಾಗಿ ಡಾ. ರಾಜೇಂದ್ರಕುಮಾರ್ ಅವರಿಗೆ ಸ್ಮರಣಿಕೆ ನೀಡುವ ಮೂಲಕ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ಡಿವೈಎಸ್ಪಿ ಡಿ.ಟಿ. ಪ್ರಭು, ಬ್ಯಾಂಕ್ನ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಇಲಾಖೆಯ ಹಲವಾರು ವಾಹನಗಳು 15 ವರ್ಷಗಳ ಸೇವೆ ಪೂರೈಸಿರುವುದರಿಂದ ಹಾಗೂ ಕೆಲ ವಾಹನಗಳು ದುರಸ್ತಿಯಲ್ಲಿ ಇರುವ ಹಿನ್ನೆಲೆಯಲ್ಲಿ ಇಲಾಖೆಗೆ ಕರ್ತವ್ಯ ನಿರ್ವಹಣೆಯಲ್ಲಿ ಅಡಚಣೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಿಎಸ್ಆರ್ ನಿಧಿ ಮೂಲಕ ಹೊಸ ವಾಹನ ಒದಗಿಸುವಂತೆ ಬ್ಯಾಂಕ್ಗೆ ಮನವಿ ಸಲ್ಲಿಸಲಾಗಿತ್ತು.






