ರಾಜ್ಯದಲ್ಲಿ ಸಂವಿಧಾನದ ಮೂಲಭೂತ ಹಕ್ಕುಗಳು, ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಲವಾರು ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲೆಯ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮುಖ್ಯಮಂತ್ರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
2020–21ರ ಅವಧಿಯಲ್ಲಿ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಮೂರು ದೊಡ್ಡ ವಿವಾದಗಳನ್ನು ಹುಟ್ಟುಹಾಕಿದ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2021 (ಮತಾಂತರ ನಿಷೇಧ ಕಾಯ್ದೆ)
ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021 ಹಾಗೂ 4% ಮುಸ್ಲಿಂ ಮೀಸಲಾತಿ ರದ್ದು… ಈ ಕಾಯ್ದೆಗಳು ಜಾರಿಯಾದ ನಂತರ ರಾಜ್ಯದಲ್ಲಿ ಕೋಮು ಒಡಕು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ರೈತರ ಸಂಕಟ ಮತ್ತು ಪೊಲೀಸ್ ಅತಿಕ್ರಮಣದ ಆರೋಪಗಳು ಹೆಚ್ಚಾಗಿದ್ದವು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಈ ಕಾನೂನುಗಳನ್ನು ಒಂದು ವರ್ಷದೊಳಗೆ ರದ್ದುಪಡಿಸುವುದಾಗಿ ಸ್ಪಷ್ಟ ಭರವಸೆ ನೀಡಿತ್ತು. ಇದೀಗ ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಕಳೆದರೂ ಕಾಯ್ದೆ ರದ್ದು ಮಾಡುವ ಪ್ರಕ್ರಿಯೆ ಇನ್ನೂ ಸ್ಪಷ್ಟವಾಗಿಲ್ಲ. ಇದೇ ಹಿನ್ನೆಲೆಯಲ್ಲಿ ವೆಲ್ಫೇರ್ ಪಾರ್ಟಿ ಮನವಿ ಸಲ್ಲಿಸಿದೆ.
ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷ ಇದ್ರೀಸ್ ಹೂಡೆ, “ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ತರಲಾಗಿತ್ತು. ಈ ಕಾಯ್ದೆಯ ಹೆಸರಿನಲ್ಲಿ ಹೈನುಗಾರಿಕೆ ಮಾಡುವ ಬಡವರು ಮತ್ತು ರೈತರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಜಾನುವಾರು ಸಾಗಾಟಕ್ಕೂ ಅಡೆತಡೆ ಉಂಟಾಗಿದೆ. ನಿರುಪಯುಕ್ತ ಜಾನುವಾರುಗಳನ್ನೂ ಸಾಗಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ಕಾಯ್ದೆಯನ್ನು ಹಿಂತೆಗೆದುಕೊಳ್ಳುವುದಾಗಿ ಸ್ಪಷ್ಟವಾಗಿ ಹೇಳಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಜನಸಾಮಾನ್ಯರಿಗೆ ತೊಂದರೆ ಉಂಟುಮಾಡುವ ಇಂತಹ ಕಾನೂನು ಬೇಡವೆಂಬುದು ನಮ್ಮ ಆಗ್ರಹ. ಜೊತೆಗೆ ಮುಸ್ಲಿಮರಿಗೆ ಇದ್ದ 4% ಮೀಸಲಾತಿಯನ್ನು ನ್ಯಾಯದ ವಿರುದ್ದವಾಗಿ ಹಿಂದಕ್ಕೆ ಪಡೆಯಲಾಗಿತ್ತು. ಅದನ್ನು ಬೇರೆ ಸಮುದಾಯಗಳಿಗೆ ಹಂಚುವ ಮಾತನ್ನೂ ಹೇಳಲಾಗಿತ್ತು. ಇದು ಸಂಪೂರ್ಣವಾಗಿ ತಾರತಮ್ಯಪೂರ್ಣವಾಗಿದ್ದು, ಒಂದು ಸಮುದಾಯದ ಬಗ್ಗೆ ನಕಾರಾತ್ಮಕ ಮನೋಭಾವ ಹೊಂದಿರುವ ಸರ್ಕಾರ ಕೈಗೊಂಡ ನಿರ್ಧಾರವಾಗಿದೆ. ಈ ಕಾಯ್ದೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದ್ದರೂ, ಇನ್ನೂ ಯಾವುದೇ ಕ್ರಮ ಜರುಗಿಲ್ಲ. ಇನ್ನೊಂದು ಕಾನೂನು ಧರ್ಮದ ವಿಷಯದಲ್ಲಿ ನಂಬಿಕೆ ಮತ್ತು ವಿಶ್ವಾಸಕ್ಕೆ ವಿರುದ್ಧವಾದ ಕಾನೂನನ್ನೂ ಹಿಂದಿನ ಸರ್ಕಾರ ತಂದಿತ್ತು. ಈ ಕಾನೂನು ಜನರ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಸುತ್ತದೆ ಎಂಬುದು ನಮ್ಮ ಅಭಿಪ್ರಾಯ. ಇದನ್ನೂ ನಾವು ತೀವ್ರವಾಗಿ ವಿರೋಧಿಸುತ್ತಿದ್ದೇವೆ. ಈ ಮೂರು ವಿಷಯಗಳನ್ನೂ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ರದ್ದುಪಡಿಸುವುದಾಗಿ ಘೋಷಿಸಿತ್ತು. ಅದನ್ನು ನಾವು ಈಗ ಸರ್ಕಾರಕ್ಕೆ ನೆನಪಿಸುತ್ತಿದ್ದೇವೆ ಮತ್ತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದೇವೆ. ವೆಲ್ಫೇರ್ ಪಾರ್ಟಿ ವತಿಯಿಂದ ರಾಜ್ಯದಾದ್ಯಂತ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ” ಎಂದು ಹೇಳಿದರು.

ಮನವಿಯಲ್ಲಿ ಏನಿದೆ?
1. ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ-2021 (ಮತಾಂತರ ನಿಷೇಧ ಕಾಯ್ದೆ): ಈ ಕಾಯ್ದೆಯ ನೆಪ ಇಟ್ಟುಕೊಂಡು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿದ್ದಾರೆ. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಯಾವುದೇ ಒತ್ತಡವಿಲ್ಲದೆ, ತಮಗೆ ಬೇಕಾದ ಧರ್ಮವನ್ನು ಒಪ್ಪಿ, ಆ ಪ್ರಕಾರ ನಡೆದುಕೊಂಡು ಹೋಗಲು ಅವಕಾಶ ಕಲ್ಪಿಸಿದೆ. ಆದರೆ ಈ ಕಾನೂನು ಚಾಲ್ತಿಯಲ್ಲಿರುವುದು ಸಂವಿಧಾನ ವಿರೋಧಿಯಾಗಿದೆ ಮತ್ತು ಇದು ಸಂಘ ಪರಿವಾರದ ಕೋಮು ಅಜೆಂಡಾದ ಭಾಗವಾಗಿದೆ.
2. ಚುನಾವಣೆ ಪ್ರಣಾಳಿಕೆಯ ಆಶ್ವಾಸನೆ: 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದ್ದರಿಂದ, ಪ್ರಸ್ತುತ ಸರಕಾರವು ತನ್ನ ಭರವಸೆಯನ್ನು ಈಡೇರಿಸುವ ತುರ್ತು ಅವಶ್ಯಕತೆಯಿದೆ.
3. 4% ಮುಸ್ಲಿಂ ಮೀಸಲಾತಿ ಮರುಸ್ಥಾಪನೆ: ಕಳೆದ ಸರಕಾರವು ರದ್ದುಪಡಿಸಿದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು. ಇದು ಮುಸ್ಲಿಂ ಸಮುದಾಯದ ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ, ಉದ್ಯೋಗದಲ್ಲಿ ಸಮಾನ ಅವಕಾಶವನ್ನು ಖಾತರಿಪಡಿಸಲು ಅತ್ಯವಶ್ಯಕವಾಗಿದೆ.
4. ಕರಾಳ ಮತ್ತು ವಿವಾದಿತ ಕಾಯ್ದೆಗಳ ರದ್ದತಿ: ಕಳೆದ ಬಿಜೆಪಿ ಸರಕಾರವು ಜಾರಿಗೆ ತಂದ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ಮತ್ತು ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ-2021 ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿವೆ. ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021: ಈ ಕಾಯ್ದೆಯ ಅನುಷ್ಠಾನದಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ. ಗೋ ಸಾಗಾಣಿಕದಾರರ ಮೇಲೆ ಪೊಲೀಸರಿಂದ ಶೂಟೌಟ್, ಮನೆ-ಮುಗ್ಗಟ್ಟುಗಳ ಜಪ್ತಿ ಮುಂತಾದ ಕಳವಳಕಾರಿ ಘಟನೆಗಳು ನಡೆದಿರುವುದು ಆತಂಕಕಾರಿಯಾಗಿದೆ.ಈ ಕರಾಳ ಕಾನೂನಿನಿಂದಾಗಿ ರೈತರು ತಾವು ಬೆಳೆಸಿದ ಜಾನುವಾರುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ, ತಮ್ಮ ನೆಚ್ಚಿನ ಕೃಷಿಯಾದ ಜಾನುವಾರು ಸಾಕಾಣಿಕೆಯನ್ನು ಮುಂದುವರೆಸಲಾಗದೆ ಕಂಗಾಲಾಗಿದ್ದಾರೆ. ಇದು ರೈತ ಸಮುದಾಯಕ್ಕೆ ಅನ್ಯಾಯವನ್ನುಂಟು ಮಾಡಿದೆ.
ಇದನ್ನೂ ಓದಿ: ಉಡುಪಿ | ಮಣಿಪಾಲದ “ಡೆಲ್ಲಿ ಡಾಬಾ”ದಲ್ಲಿ ಶಾರ್ಟ್ ಸರ್ಕ್ಯೂಟ್, ಪ್ರಾಣಾಪಾಯದಿಂದ ಪಾರು
ಆದ್ದರಿಂದ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ಅನ್ನು ತಕ್ಷಣವೇ ರದ್ದುಪಡಿಸಬೇಕು. ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 ಅನ್ನು ರದ್ದುಪಡಿಸಬೇಕು ಮತ್ತು ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಲು ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕ್ರಮ ಕೈಗೊಂಡು ರಾಜ್ಯದಲ್ಲಿ ರೈತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಎಲ್ಲ ನಾಗರಿಕರಿಗೆ ನ್ಯಾಯ ಒದಗಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ಮನವಿ ಮಾಡಿಕೊಳ್ಳುತ್ತಿದೆ.
ನಿಯೋಗದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಮುಹಮ್ಮದ್ ಇದ್ರೀಸ್ ಹೂಡೆ,ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ .ಶಹಜಹಾನ್ ತೋನ್ಸೆ ,ಅಫ್ವಾನ್ ಹೂಡೆ, ಝಕ್ರಿಯಾ ಉಪಸ್ದಿತರಿದ್ದರು.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




