ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಯೋಜನೆ (ಇ.ಎಸ್.ಐ.) ಡಿಸ್ಪೆನ್ಸರಿ ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿಮಾದಾರರಿಗೆ ಸಂಕಷ್ಟ ತಂದೊಡ್ಡುತ್ತಿದೆ. ಸುಮಾರು 15 ಸಾವಿರಕ್ಕೂ ಅಧಿಕ ವಿಮಾದಾರರು ಹಾಗೂ ಅವರ ಕುಟುಂಬ ಸದಸ್ಯರು ಈ ಡಿಸ್ಪೆನ್ಸರಿಯ ಮೇಲೆ ಅವಲಂಬಿತರಾಗಿದ್ದರೂ, ಅಗತ್ಯ ವೈದ್ಯರು, ಸಿಬ್ಬಂದಿ ಹಾಗೂ ಮೂಲಸೌಕರ್ಯಗಳ ಕೊರತೆ ಸಮಸ್ಯೆಯನ್ನು ಗಂಭೀರವಾಗಿಸಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕುಂದಾಪುರ ಇ.ಎಸ್.ಐ. ಡಿಸ್ಪೆನ್ಸರಿಯಲ್ಲಿ ಕಳೆದ 11 ವರ್ಷಗಳಿಂದ ಖಾಯಂ ವೈದ್ಯರಿಲ್ಲದೆ ಸೇವೆ ಸಾಗುತ್ತಿದೆ ಎಂಬುದು ಪ್ರಮುಖ ಸಮಸ್ಯೆಯಾಗಿದೆ. ಪ್ರಸ್ತುತ ಓರ್ವ ಮಹಿಳಾ ವೈದ್ಯರು ಮಾತ್ರ ಸೇವೆ ಸಲ್ಲಿಸುತ್ತಿದ್ದು, ಇಷ್ಟೊಂದು ದೊಡ್ಡ ಸಂಖ್ಯೆಯ ವಿಮಾದಾರರಿಗೆ ಅದು ಸಾಕಾಗುವುದಿಲ್ಲ. ಮತ್ತೊಬ್ಬ ನುರಿತ ವೈದ್ಯರನ್ನು ತಕ್ಷಣ ನೇಮಕ ಮಾಡಬೇಕೆಂಬುದು ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ.
ಈದಿನ.ಕಾಮ್ ಜೊತೆ ಮಾತನಾಡಿದ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ನರಸಿಂಹ, ಕಾರ್ಮಿಕರ ರಾಜ್ಯ ವಿಮಾ ಯೋಜನೆ (ಇಎಸ್ಐ) ಕಾರ್ಮಿಕರಿಂದ ಹಾಗೂ ಮ್ಯಾನೆಜ್ಮೆಂಟ್ನಿಂದ ಹಣ ಸಂಗ್ರಹಿಸಿದರೂ ಕಾರ್ಮಿಕರಿಗೆ ಸಮರ್ಪಕ ಸೌಲಭ್ಯ ದೊರೆಯದ ರೀತಿಯಲ್ಲಿ ಇಂದಿನ ಆಡಳಿತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.
ಈ ಅನ್ಯಾಯವನ್ನು ಖಂಡಿಸಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಕುಂದಾಪುರದಲ್ಲಿ ವಿಮಾದಾರರಿಗೆ ತುರ್ತು ಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿಯೂ ಇದುವರೆಗೆ ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಸೇವೆ ನೀಡಲಾಗುತ್ತಿತ್ತು. ಆದರೆ ಕಳೆದ ನವೆಂಬರ್ನಲ್ಲಿ ಈ ಒಡಂಬಡಿಕೆ ನವೀಕರಣದ ವೇಳೆ ಕುಂದಾಪುರದ ಆದರ್ಶ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲೆಯ ಮಣಿಪಾಲ ಆಸ್ಪತ್ರೆಯನ್ನು ಸಂಬಂಧಪಟ್ಟ ಇಲಾಖೆ ಕೈಬಿಟ್ಟಿದೆ. ಇದರಿಂದ ಕಾರ್ಮಿಕರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಹೇಳಿದರು.
ಇತ್ತೀಚೆಗೆ ಮಣಿಪಾಲ ಆಸ್ಪತ್ರೆಯನ್ನು ಮತ್ತೆ ಒಡಂಬಡಿಕೆಗೆ ಸೇರಿಸಿಕೊಂಡಿದ್ದೇವೆ ಎಂದು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದರೂ, ಕುಂದಾಪುರದಲ್ಲಿ ಯಾವ ವ್ಯವಸ್ಥೆ ಮಾಡಲಾಗಿದೆ ಎಂದು ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡುವುದಿಲ್ಲ. ಈ ವಿಷಯದಲ್ಲಿ ಸಂಬಂಧಪಟ್ಟ ಇಲಾಖೆ ಕೂಡ ಮುತುವರ್ಜಿ ವಹಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಇದರಿಂದಾಗಿ ಸಣ್ಣಪುಟ್ಟ ಕಾಯಿಲೆಗಳಿಗೂ ಮಣಿಪಾಲ ಆಸ್ಪತ್ರೆಗೆ ಹೋಗುವುದು ಕಾರ್ಮಿಕರಿಗೆ ಸಾಧ್ಯವಾಗುವುದಿಲ್ಲ. ಇಂದಿನ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಗಳು ಗಂಭೀರವಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಕಾರ್ಮಿಕರಿಗೆ ಹಣ ಕೊಡುವ ಸಾಮರ್ಥ್ಯವೂ ಇಲ್ಲ. ನಾವು ವಿಮೆ ಮಾಡಿಕೊಂಡಿದ್ದರೂ ಸೌಲಭ್ಯ ದೊರೆಯದಿದ್ದರೆ ಅದು ಕಾರ್ಮಿಕರಿಗೆ ವಂಚನೆಯೇ ಆಗುತ್ತದೆ. ಆದ್ದರಿಂದ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸದ್ದೇವೆ ಎಂದು ಹೇಳಿದರು.

ಸಣ್ಣ ಚಿಕಿತ್ಸೆಗೂ ಉಡುಪಿ–ಮಣಿಪಾಲ ಪಯಣ
ಡಿಸ್ಪೆನ್ಸರಿಯಲ್ಲಿ ಸಮರ್ಪಕ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೂ ವಿಮಾದಾರರು ಉಡುಪಿ ಅಥವಾ ಮಣಿಪಾಲಕ್ಕೆ ತೆರಳಬೇಕಾದ ಪರಿಸ್ಥಿತಿ ಎದುರಾಗುತ್ತಿದೆ. ಇದು ವಿಶೇಷವಾಗಿ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಸಮಯ ಮತ್ತು ವೆಚ್ಚದ ದೃಷ್ಟಿಯಿಂದ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿಯೇ ಉತ್ತಮ ಆರೋಗ್ಯ ಸೌಲಭ್ಯ ಹೊಂದಿರುವ ಖಾಸಗಿ ಆಸ್ಪತ್ರೆಯೊಂದರೊಂದಿಗೆ ಒಡಂಬಡಿಕೆ ಮಾಡಿಕೊಂಡು ತುರ್ತು ಹಾಗೂ ಹೆಚ್ಚುವರಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸಿಬ್ಬಂದಿ ಕೊರತೆ, ಔಷಧಿ ಸಮಸ್ಯೆ
ಡಿಸ್ಪೆನ್ಸರಿಯಲ್ಲಿ ಅಗತ್ಯ ಸಿಬ್ಬಂದಿಗಳ ಕೊರತೆಯೂ ಚಿಕಿತ್ಸಾ ಸೇವೆಗೆ ಅಡ್ಡಿಯಾಗುತ್ತಿದೆ. ವಿಮಾದಾರರಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕಲು ಸಿಬ್ಬಂದಿ ನೇಮಕಾತಿ ಅಗತ್ಯವಾಗಿದೆ. ಜೊತೆಗೆ ಉತ್ತಮ ಗುಣಮಟ್ಟದ ಔಷಧಿಗಳು ನಿರಂತರವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕೆಂಬುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.
ಕುಂದಾಪುರದ ಇ.ಎಸ್.ಐ. ಡಿಸ್ಪೆನ್ಸರಿ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರೋಗಿಗಳು ಹಾಗೂ ವಯೋವೃದ್ಧರಿಗೆ ಮೆಟ್ಟಿಲು ಏರಿ ಮೇಲಕ್ಕೆ ಹೋಗುವುದು ಕಷ್ಟಕರವಾಗಿದೆ. ಕೆಲವೊಮ್ಮೆ ರೋಗಿಗಳಿಗೆ ಕುಳಿತುಕೊಳ್ಳಲು ಕೂಡ ಸ್ಥಳಾವಕಾಶದ ಕೊರತೆ ಕಾಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿರುವ ಸ್ವಂತ ಕಟ್ಟಡದಲ್ಲಿ ನೆಲಮಾಳಿಗೆಯಲ್ಲಿ ಡಿಸ್ಪೆನ್ಸರಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ವೇಗವಾಗಿ ಬೆಳೆಯುತ್ತಿರುವ ಕುಂದಾಪುರ ತಾಲೂಕಿಗೆ ಇ.ಎಸ್.ಐ. ಲೋಕಲ್ ಕಚೇರಿ ಮಂಜೂರು ಮಾಡುವಂತೆ ಹಲವು ವರ್ಷಗಳಿಂದ ಕಾರ್ಮಿಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಈವರೆಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಅವರ ಅಸಮಾಧಾನವಾಗಿದೆ. ಈಗಲಾದರೂ ಕುಂದಾಪುರದಲ್ಲಿ ಲೋಕಲ್ ಕಚೇರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬ್ರಹ್ಮಾವರದ 100 ಹಾಸಿಗೆ ಆಸ್ಪತ್ರೆ ಕಾಮಗಾರಿ ವಿಳಂಬ
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಜೂರಾಗಿರುವ 100 ಹಾಸಿಗೆ ಸಾಮರ್ಥ್ಯದ ಇ.ಎಸ್.ಐ. ಜಿಲ್ಲಾ ಆಸ್ಪತ್ರೆ ಕಾಮಗಾರಿ ನಾಲ್ಕು ವರ್ಷಗಳಿಂದ ಆರಂಭವಾಗದೆ ಇರುವುದೂ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಸಾವಿರಾರು ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗಲಿದೆ. ಆದ್ದರಿಂದ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕೆಂದು ಕಾರ್ಮಿಕರು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಹೆಂಚು ಕಾರ್ಮಿಕರ ಸಂಘದ ಉಪಾಧ್ಯಕ್ಷ ಜಿ.ಡಿ. ಪಂಜು, ಪ್ರಮುಖರಾದ ಚಂದ್ರಶೇಖರ್, ಸುರೇಂದ್ರ ಎಚ್, ಚಂದ್ರ ಪೂಜಾರಿ, ಪ್ರಕಾಶ್ ಕೋಣಿ, ಮಹಾಬಲ ವಡೇರಹೋಬಳಿ, ಆನಂದ ಶೆಟ್ಟಿ ಲಕ್ಷ್ಮಣ ಮೊದಲಾದವರು ಉಪಸ್ಥಿತರಿದ್ದರು.

ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.




