ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ ಕ್ರೈಸ್ತ ಸಮುದಾಯದ ವಾರ್ಷಿಕ ‘ಸಮಾಧಾನ’ ಧಾರ್ಮಿಕ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಹಬಾಳ್ವೆ ಉಡುಪಿ ಜಿಲ್ಲೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಈ ಕುರಿತು ಸಂಘಟನೆಯ ಪ್ರಧಾನ ಸಂಚಾಲಕ ಕೆ. ಫಣಿರಾಜ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕ್ರೈಸ್ತ ಸಮುದಾಯವು ತಮ್ಮ ಸಂಸ್ಥೆಗಳ ವ್ಯಾಪ್ತಿಯ ಕ್ರಿಶ್ಚಿಯನ್ ಶಾಲಾ ಮೈದಾನದಲ್ಲಿ ತಮ್ಮ ಅನುಯಾಯಿಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಭಾರತದ ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಡಿ ಇಂತಹ ಆಚರಣೆಗಳು ಸಹಜವಾಗಿ ನಡೆಯಬೇಕಾಗಿದೆ ಎಂದಿದ್ದಾರೆ.

ಆದರೆ, ಹಿಂದು ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಹೇಳಿಕೆ ನೀಡಿದ್ದು, ಹಿಂಸಾತ್ಮಕ ವಾತಾವರಣ ಸೃಷ್ಟಿಸುವ ಬಗ್ಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಇಂತಹ ಹೇಳಿಕೆಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವಂತಿದ್ದು, ಜಿಲ್ಲಾಡಳಿತವು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಲಾಗಿದೆ.
ಹೀಗಾಗಿ, ಸಂಬಂಧಪಟ್ಟ ವ್ಯಕ್ತಿ ಹಾಗೂ ಸಂಘಟನೆಯ ವಿರುದ್ಧ ಕಾನೂನು ಕ್ರಮ ಜರುಗಿಸಿ, ಕ್ರೈಸ್ತ ಸಮುದಾಯದ ಧಾರ್ಮಿಕ ಕಾರ್ಯಕ್ರಮವು ಯಾವುದೇ ಅಡಚಣೆ ಇಲ್ಲದೆ ಶಾಂತಿಯುತವಾಗಿ ನಡೆಯುವಂತೆ ಜಿಲ್ಲಾಡಳಿತವು ತನ್ನ ಸಂವಿಧಾನಬದ್ಧ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಸಹಬಾಳ್ವೆ ಸಂಘಟನೆ ಆಗ್ರಹಿಸಿದೆ.





