ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತಮ್ಮ ಧರ್ಮವನ್ನು ಆಚರಿಸುವುದು ಹಾಗೂ ಪ್ರಚಾರ ಮಾಡುವ ಹಕ್ಕು ಇದೆ. ಧಾರ್ಮಿಕ ಆಚರಣೆಗಳು ಮತ್ತು ಕಾರ್ಯಕ್ರಮಗಳಿಗೆ ತಡೆಯೊಡ್ಡುವುದು ಕಾನೂನುಬಾಹಿರವಾಗಿದ್ದು, ಸಂವಿಧಾನ ವಿರೋಧಿಯಾಗಿದೆ ಎಂದು ಸುಂದರ ಮಾಸ್ತರ್ ತಿಳಿಸಿದ್ದಾರೆ.
ಈದಿನ.ಕಾಮ್ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಕಾರ್ಕಳದಲ್ಲಿ ಪ್ರಾರ್ಥನಾ ಮಂದಿರಕ್ಕೆ ಅತಿಕ್ರಮವಾಗಿ ನುಗ್ಗಿ ದಾಂಧಲೆ ನಡೆಸಿದ ಶ್ರೀಕಾಂತ ಶೆಟ್ಟಿ, ಇದೀಗ ಮತ್ತೊಂದು ಗೂಂಡಾ ಕೃತ್ಯಕ್ಕೆ ತಯಾರಿ ನಡೆಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಇಂತಹವರನ್ನು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಬೇಕು. ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಡುಪಿ ಜಿಲ್ಲೆಯಲ್ಲೂ ಕೋಮು ಸಂಘರ್ಷ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಮೌಢ್ಯ ವಿಚಾರವನ್ನು ಉಲ್ಲೇಖಿಸಿದ ಅವರು, “ಕಲ್ಲಿನ ಮೂರ್ತಿಗೆ ಲೀಟರ್ಗಟ್ಟಲೆ ಹಾಲು ಸುರಿಸುವುದೋ, ಹೋಮ-ಹವನದ ಹೆಸರಿನಲ್ಲಿ ತುಪ್ಪ, ತೆಂಗಿನಕಾಯಿ, ಬಾಳೆಹಣ್ಣುಗಳನ್ನು ಬೆಂಕಿಗೆ ಹಾಕುವುದೋ, ಅಥವಾ ತಾಯಿತ ಕಟ್ಟಿಕೊಳ್ಳುವುದೋ—ಇವುಗಳಲ್ಲಿ ಯಾವುದು ಮೌಢ್ಯ?” ಎಂದು ಪ್ರಶ್ನಿಸಿದರು. ಪೂಜೆ, ಹೋಮ, ಹವನಗಳಿಂದ ರೋಗಗಳು ಗುಣವಾಗುತ್ತಿದೆಯಾದರೆ ಆಸ್ಪತ್ರೆಗಳ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.

ಸೌಹಾರ್ದತೆಗೆ ಹೆಸರಾಗಿರುವ ಉಡುಪಿ ಜಿಲ್ಲೆಯಲ್ಲಿ ಶಾಂತಿ ಭಂಗಗೊಳಿಸುವ ಪ್ರಯತ್ನಗಳನ್ನು ತಡೆಯಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕೋಮು ದ್ವೇಷ ಹರಡುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಉಡುಪಿ ನಗರದಲ್ಲಿ ತಲವಾರು ಬೀಸುತ್ತಾ, ತ್ರಿಶೂಲ ಪ್ರದರ್ಶಿಸುತ್ತಾ ಮೆರವಣಿಗೆ ನಡೆಸುವಂತಹ ಘಟನೆಗಳನ್ನು ಈಗಲೇ ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಎದುರಾಗಬಹುದು ಎಂದು ಎಚ್ಚರಿಸಿದರು.
ಈ ಹಿನ್ನೆಲೆಯಲ್ಲಿ ಶ್ರೀಕಾಂತ ಶೆಟ್ಟಿಯನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಬೇಕು. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ತಮ್ಮ ತಮ್ಮ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಹಾಗೂ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆಗ್ರಹಿಸಿದ್ದಾರೆ.





