ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಹೊರಡಿಸಿರುವ ಆದೇಶದಲ್ಲಿರುವ ಮಾರ್ಗಸೂಚಿಗಳನ್ನು ಮಾನವೀಯ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಅನುಷ್ಠಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತ ಜಿಲ್ಲ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜನಸಾಮಾನ್ಯರಿಗೆ ಬೀದಿ ನಾಯಿಗಳಿಂದ ಉಂಟಾಗುವ ಉಪಟಳಗಳನ್ನು ತಪ್ಪಿಸುವ ಉದ್ದೇಶದಿಂದ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಕೆಲವೊಂದು ಮಾರ್ಗದರ್ಶನಗಳನ್ನು ಸೂಚಿಸಿದೆ. ಇವುಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರೊಂದಿಗೆ ಬೀದಿ ನಾಯಿಗಳಿಂದ ಉಂಟಾಗುವ ತೊಂದರೆಗಳನ್ನು ನಿಯಂತ್ರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಸಂಬಂಧಪಟ್ಟ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು, ಎ.ಬಿ.ಸಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು, ರೇಬೀಸ್ ಹರಡದಂತೆ ತಡೆಗಟ್ಟಲು ಲಸಿಕಾ ಕಾರ್ಯಕ್ರಮ ಸೇರಿದಂತೆ ಮತ್ತಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದು, ಇದು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದರು.

ಜಿಲ್ಲೆಯ ನಗರ ಭಾಗದಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 440 ಬೀದಿನಾಯಿಗಳನ್ನು ಗುರುತಿಸಲಾಗಿರುತ್ತದೆ. ಈ ಸಂಸ್ಥೆಗಳ ಗೇಟ್ಗಳ ಮೇಲೆ ಸಂಬಂಧಪಟ್ಟ ನೋಡೆಲ್ ಅಧಿಕಾರಿಗಳ ಹೆಸರು, ಮೊಬೈಲ್ ನಂಬರ್ ಹಾಗೂ “ಇಲ್ಲಿ ನಾಯಿಗಳು ಕಂಡಲ್ಲಿ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿ” ಎಂಬ ಫಲಕಗಳನ್ನು ಪ್ರತೀ ಸಂಸ್ಥೆಗಳಲ್ಲಿ ಅಳವಡಿಸಿರುವ ಕುರಿತ ವಿವರಗಳನ್ನು ಜಿ.ಪಿ.ಎಸ್ ಫೋಟೋದೊಂದಿಗೆ ಎರಡು ದಿನಗಳ ಒಳಗಾಗಿ ನೀಡುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ನೇಮಕ ಮಾಡಲಾದ ನೋಡೆಲ್ ಅಧಿಕಾರಿಗಳ ವಿವರವನ್ನು ಸಲ್ಲಿಸುವಂತೆ ಸೂಚಿಸಿದರು.
ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಅಥವಾ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಪ್ರತೀ ತಾಲೂಕಿನಲ್ಲಿಯೂ ಆಶ್ರಯ ತಾಣಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸುವಂತೆ ಈಗಾಗಲೇ ಕಳೆದ ಸಭೆಯಲ್ಲಿ ಸೂಚಿಸಲಾಗಿದ್ದು, ಉಡುಪಿ ನಗರ ವ್ಯಾಪ್ತಿಯಲ್ಲಿ 9 ಎಕ್ರೆ, ಕುಂದಾಪುರದ ಕಂದಾವರ ಡಂಪಿಂಗ್ ಯಾರ್ಡ್ ಬಳಿ 1.5 ಎಕ್ರೆ, ಕಾರ್ಕಳದಲ್ಲಿ 1 ಎಕ್ರೆ, ಕಾಪುವಿನ ಶಿರ್ವದಲ್ಲಿ 3 ಎಕ್ರೆ, ಬೈಂದೂರಿನಲ್ಲಿ 1 ಎಕ್ರೆ ಹಾಗೂ ಸಾಲಿಗ್ರಾಮದ ಗಿಳಿಯಾರು ನಲ್ಲಿ 3 ಎಕರೆ ಗುರುತಿಸಲಾಗಿದೆ ಎಂದ ಅವರು, ಎಸ್.ಓ.ಪಿ ಅನ್ವಯ ಅಗತ್ಯವಿರುವ ಆಹಾರ, ನೀರು, ನೆರಳು, ಪಶು ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತಹ ಆಶ್ರಯ ತಾಣಗಳನ್ನು ಕೂಡಲೇ ನಿರ್ಮಾಣ ಮಾಡುವುದರೊಂದಿಗೆ ಡಾಗ್ ಶೆಲ್ಟರ್ ಎಂಬ ಬೋರ್ಡನ್ನು ಅಳವಡಿಸುವಂತೆ ಕ್ರಮ ವಹಿಸಬೇಕೆಂದರು.
ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ ವಿತರಣೆಗೆ ಸ್ಥಳಗಳನ್ನು ಗುರುತಿಸಬೇಕು. ನಿಗದಿತ ಜಾಗದಲ್ಲಿ ಮಾತ್ರ ಆಹಾರ ನೀಡಬೇಕು. ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡದಂತೆ ಸುಪ್ರೀಂಕೋರ್ಟ್ ಆದೇಶದಲ್ಲಿ ಸೂಚಿಸಿದ್ದು, ಇದು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನೋಡಲ್ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಜಿಲ್ಲೆಯ ನಗರ ಹಾಗೂ ಸ್ಥಳೀಯ ಸಂಸ್ಥೆಯವರು ಬೀದಿನಾಯಿಗಳ ಸ್ಥಳಾಂತರ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ ಕುರಿತು ಸಹಾಯವಾಣಿ ಸ್ಥಾಪಿಸಿ, ಜನರ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಜಿಲ್ಲೆಯಲ್ಲಿ ಡಾಗ್ ಅಡಾಪ್ಷನ್ ಕುರಿತು ಜಾಗೃತಿ ಮೂಡಿಸಬೇಕು. ಇತರೆ ಕೆಲವು ಜಿಲ್ಲೆಗಳಲ್ಲಿಯೂ ಸಹ ಬೀದಿ ನಾಯಿಗಳ ಡಾಗ್ ಶೋ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ, ಡಾಗ್ ಶೋ ಮಾಡಿದ್ದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ನಾಯಿಗಳನ್ನು ದತ್ತು ಸ್ವೀಕಾರ ಮಾಡಿಲಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿ ಡಾಗ್ ಅಡಾಪ್ಷನ್ ಮಾಡಿಕೊಂಡಿರುವ ವಿವರಗಳನ್ನು ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.





