ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅವರ ನಿರ್ದೇಶನದ ಮೇರೆಗೆ ಶನಿವಾರ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ಈ ಸಂದರ್ಭದಲ್ಲಿ ಒಂದೇ ದಿನ ಒಟ್ಟು 38,369 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಯಿತು.
ಇತ್ಯರ್ಥಗೊಂಡ ಪ್ರಕರಣಗಳಲ್ಲಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು 33, ಚೆಕ್ ಅಮಾನ್ಯ ಪ್ರಕರಣಗಳು 391, ಬ್ಯಾಂಕ್/ಹಣ ವಸೂಲಾತಿ ಪ್ರಕರಣಗಳು 5, ಮೋಟಾರು ವಾಹನ ಪರಿಹಾರ (ಎಂವಿಸಿ) ಪ್ರಕರಣಗಳು 99, ಸಿವಿಲ್ ಪ್ರಕರಣಗಳು 273, ಎಂಎಂಆರ್ಡಿ ಪ್ರಕರಣಗಳು 2, ವಿದ್ಯುತ್ ಕಾಯಿದೆ ಪ್ರಕರಣ 1, ಇತರೆ ಕ್ರಿಮಿನಲ್ ಪ್ರಕರಣಗಳು 2,094 ಹಾಗೂ ಕಾರ್ಮಿಕ ವ್ಯಾಜ್ಯಗಳು 11 ಸೇರಿವೆ. ಇದರೊಂದಿಗೆ 35,460 ವ್ಯಾಜ್ಯ ಪೂರ್ವ ಪ್ರಕರಣಗಳು ಕೂಡ ಇತ್ಯರ್ಥಗೊಂಡಿವೆ.

ಲೋಕ್ ಅದಾಲತ್ನಲ್ಲಿ ಒಟ್ಟು ₹20,92,55,344 ಪರಿಹಾರ ಮೊತ್ತವನ್ನು ಘೋಷಿಸಲಾಗಿದೆ.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿಗಳು, ವಕೀಲರ ಸಂಘಗಳು, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕುಗಳು ಹಾಗೂ ಇತರ ಸರ್ಕಾರಿ ಇಲಾಖೆಗಳ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಯಾಗಿ ನಡೆಯಿತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





