ಉತ್ತರ ಕನ್ನಡ: ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯ, ಹಿಂಸಾಚಾರದಿಂದ ತಕ್ಷಣದಲ್ಲಿ ನೆರವು ಪಡೆಯಲು ಉಚಿತ ಸಹಾಯವಾಣಿ ಸಂಖ್ಯೆ 181 ಗೆ ಕರೆ ಮಾಡುವ ಮೂಲಕ ಅದರ ಉಪಯೋಗ ಪಡೆಯಬೇಕು ಹಾಗೂ ತಮ್ಮ ಮೇಲೆ ಆಗುತ್ತಿರುವ ಅನ್ಯಾಯಗಳನ್ನು ಯಾವುದೇ ಭಯವಿಲ್ಲದೆ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ತಮಗೆ ಆದ ಅನ್ಯಾಯದ ವಿರುದ್ದ ಹೊರಾಡಲು ಉಚಿತ ಕಾನೂನು ಸಲಹೆಯ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರೀಯಾ ಅವರು ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ, ಲೈಂಗಿಕ ಹಿಂಸೆ ಸೇರಿದಂತೆ ಯಾವುದೇ ಸಮಸ್ಯೆಗಳ ಸಂದರ್ಭಗಳಲ್ಲಿ 181 ಸಹಾಯವಾಣಿ ಅತ್ಯಂತ ಉಪಯುಕ್ತವಾಗಿದ್ದು ತಕ್ಷಣ ಸ್ಪಂದಿಸುವ ವ್ಯವಸ್ಥೆ ಹೊಂದಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್-ಸ್ಟಾಪ್ ಸೆಂಟರ್ ಮುಖಾಂತರ ಪ್ರಸಕ್ತ ಸಾಲಿನಲ್ಲಿ ಸೆಪ್ಟಂಬರ್ ವರೆಗೆ 74 ಪ್ರಕರಣಗಳು ದಾಖಲಾಗಿದ್ದು, ನೊಂದ ಮಹಿಳೆಯರಿಗೆ ಕಾನೂನು ನೆರವು, ವೈದ್ಯಕೀಯ ನೆರವು, ಪೊಲೀಸ್ ನೆರವು ಹಾಗೂ ಸಮಾಲೋಚನಾ ಸೇವೆಗಳು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಸಾಂತ್ವನ ಯೋಜನೆ ಮೂಲಕ ನೊಂದ ಮಹಿಳೆಯರಿಗೆ ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ಅಗತ್ಯ ನೆರವು ನೀಡಲಾಗುತ್ತಿದ್ದು, ಈ ಕೇಂದ್ರಗಳ ಸಿಬ್ಬಂದಿ 24×7 ಸ್ಪಂದಿಸಬೇಕು ಎಂದು ಸೂಚಿಸಿದರು. ಈ ಸಾಲಿನಲ್ಲಿ 395 ದೂರುಗಳು ದಾಖಲಾಗಿ ಎಲ್ಲಾ ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ. ದೂರುಗಳ ಕುರಿತು ಇನ್ನೂ ಪರಿಣಾಮಕಾರಿಯಾಗಿ ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಾಗಿ ಗ್ರಾಮ ಮಟ್ಟದಿಂದ ರಚಿಸಲಾದ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳು ನಡೆಯದಂತೆ, ನಗರ ಮತ್ತು ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.
ಗ್ರಾಮ ಸಭೆಗಳಲ್ಲೂ ಈ ವಿಷಯದ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ 17 ಪೋಕ್ಸೋ ಪ್ರಕರಣಗಳು ವರದಿಯಾಗಿದ್ದು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಂಗನವಾಡಿ ಮತ್ತು ಶಾಲಾ ಮಕ್ಕಳ ಆರೋಗ್ಯ ತಪಾಸಣೆಯಲ್ಲಿ ಶೇ.100 ಸಾಧನೆ ಆಗುವಂತೆ ಕ್ರಮ ಕೈಗೊಳ್ಳಬೇಕು. ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚಿನ ಗಮನ ನೀಡಿ ಸೂಕ್ತ ಚಿಕಿತ್ಸೆ ಒದಗಿಸಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ನಿಗದಿನಂತೆ ಪೌಷ್ಠಿಕ ಆಹಾರ ಒದಗಿಸುವ ಜೊತೆಗೆ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡಬೇಕೆಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಅಂಗನವಾಡಿಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪೊಲೀಸ್ ಕಾರ್ಯಾಚರಣೆ: ₹8 ಲಕ್ಷ ಮೌಲ್ಯದ ಚರಸ್ ವಶ, ಆರೋಪಿ ಸಚಿನ್ ಬಂಧನ
ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿತ ಮಹಿಳೆಯರಿಗೆ ಯೋಜನೆಯ ಪ್ರಯೋಜನ ತಾಂತ್ರಿಕ ಅಥವಾ ಇತರೆ ಕಾರಣಗಳಿಂದ ದೊರೆಯದೇ ಇರುವ ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು. ಹಾಗೂ ಮಹಿಳಾ ಅಭಿವೃದ್ದಿ ನಿಗಮದ ಮೂಲಕ– ಲಿಂಗತ್ವ ಅಲ್ಪಸಂಖ್ಯಾತರು,– ಹೆಚ್ಐವಿ ಸೋಂಕಿತರು,– ದಮನಿತ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಲಭ್ಯವಿರುವ ಸಾಲ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ, ಅವರಿಗೆ ಈ ಪ್ರಯೋಜನಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ತರಬೇತಿ ನಿರತ ಐಎಎಸ್ ಅಧಿಕಾರಿ ಜೂಫಿಶಾನ್ ಹಕ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ನಿರೂಪಣಾಧಿಕಾರಿ ವಿರೂಪಾಕ್ಷ ಗೌಡ ಪಾಟೀಲ್ ಮತ್ತು ಎಲ್ಲಾ ತಾಲೂಕುಗಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.





