ಉತ್ತರ ಕನ್ನಡ: ಜಿಲ್ಲೆಯ ದಲಿತ ಸಮುದಾಯದ ವಿವಿಧ ಕುಂದುಕೊರತೆಗಳು ಹಾಗೂ ಶಿರಸಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್ ಎಂ ಎನ್ ಅವರನ್ನು ಭೇಟಿ ಮಾಡಿದರು.
ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅರ್ಜುನ್ ಮಿಂಟಿ ಅವರ ನೇತೃತ್ವದ ನಿಯೋಗವು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರುವ ಕುಂದುಕೊರತೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ಶಿರಸಿಯಲ್ಲಿ ರಾಷ್ಟ್ರೀಯ ಪಕ್ಷವೊಂದು ನಡೆಸಿದ ಎನ್ನಲಾದ ಹೀನ ಕೃತ್ಯದ ಬಗ್ಗೆಯೂ ಎಸ್ಪಿಯವರ ಗಮನ ಸೆಳೆದ ಅರ್ಜುನ್ ಮಿಂಟಿ ಅವರು, ಈ ಘಟನೆಯು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.
ಶಿರಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದ ಭೀಮ ಘರ್ಜನೆ ಸಂಘಟನೆಯು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿತು. ಸಂಘಟನೆಯ ಮನವಿಗೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ದಲಿತ ಸಮುದಾಯದ ರಕ್ಷಣೆ ಮತ್ತು ಕುಂದುಕೊರತೆಗಳ ನಿವಾರಣೆಗೆ ಇಲಾಖೆ ಬದ್ಧವಾಗಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?
ಶಿರಸಿಯಲ್ಲಿ ನಡೆದ ಘಟನೆಯ ಬಗ್ಗೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಕುರಿತು ಸಂಪೂರ್ಣ ವಿಚಾರಣೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.





