ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ಮಾಹಿತಿಯನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು. ನೋಂದಣಿ ಪ್ರಕ್ರಿಯೆ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಸೂಚಿಸಿದರು.
ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ–ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಎಲ್ಲಾ ತಾಲ್ಲೂಕುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಭವಿಸುವ ಜನನ ಮತ್ತು ಮರಣ ಪ್ರಕರಣಗಳನ್ನು ನಿಗದಿತ ಅವಧಿಯೊಳಗೆ ಶೇಕಡಾ 100ರಷ್ಟು ನೋಂದಣಿ ಮಾಡಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಮರಣ ಕಾರಣದ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ನೀಡುವಂತೆ ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಬೇಕು. ಜೊತೆಗೆ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಹಸೀಲ್ದಾರ್ಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು” ಎಂದು ಹೇಳಿದರು.
“ಪ್ರಸ್ತುತ ಕ್ಯಾಲೆಂಡರ್ ವರ್ಷದಲ್ಲಿ ಜಿಲ್ಲೆಯಲ್ಲಿ 6,494 ಗಂಡು, 6,049 ಹೆಣ್ಣು ಮಕ್ಕಳು ಜನಿಸಿದ್ದು, 4,771 ಪುರುಷರು ಹಾಗೂ 3,681 ಮಹಿಳೆಯರು ವಿವಿಧ ಕಾರಣಗಳಿಂದ ಮರಣ ಹೊಂದಿದ್ದಾರೆ. ಜನನ–ಮರಣ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಡಿಜಿಟಲ್ ಸಹಿಯೊಂದಿಗೆ ವಿತರಿಸಬೇಕು. ಡಿಜಿಟಲ್ ಸಿಗ್ನೇಚರ್ ಕಾರ್ಡ್ಗಳ ಅವಧಿ ಮೀರುವ ಮುನ್ನವೇ ಅವುಗಳನ್ನು ನವೀಕರಿಸಿಕೊಳ್ಳಬೇಕು. ಜನನ–ಮರಣ ನೋಂದಣಿ ಸಮಯದಲ್ಲಿ ದಿನಾಂಕಗಳು ತಪ್ಪಾಗಿ ನಮೂದಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಕುಮಟಾ | ಚತುಷ್ಪಥ ರಸ್ತೆ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಎಚ್ಚರಿಕೆ
“ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂರಕ್ಷಣಾಧಿಕಾರಿಗಳು, ನೋಂದಣಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಹಾಗೂ ಆಪರೇಟರ್ಗಳಿಗೆ ತರಬೇತಿ ನೀಡಬೇಕೆಂದು ಸೂಚಿಸಿದರು. ಜನನ–ಮರಣ ನೋಂದಣಿ ದಾಖಲೆಗಳನ್ನು ಶಾಶ್ವತವಾಗಿ ಕಾಯ್ದಿರಿಸಲು ಅವುಗಳನ್ನು ಸ್ಕ್ಯಾನಿಂಗ್ ಮತ್ತು ಡಿಜಿಟಲೈಜೇಶನ್ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ, ಕ್ರಿಮ್ಸ್ನ ಡೀನ್ ಡಾ. ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.





