ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆಯ ಸಂದೇಶವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರು ಭರತ ಖಂಡ ಕಂಡಂತಹ ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಧ್ಯಕ್ಷ ರಾಮಾ ನಾಯ್ಕ ತಿಳಿಸಿದರು.
ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
“ನಾರಾಯಣ ಗುರುಗಳು, ಒಂದೇ ಜಾತಿ, ಧರ್ಮಕ್ಕೆ ಸಿಮೀತರಾದವರಲ್ಲ. ಇಡೀ ಜಗತ್ತಿನ ಮಾನವ ಕುಲಕ್ಕೇ ಗುರುಗಳು. ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ ಮತ್ತು ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದವರು. ಅವರು ಪ್ರತಿಪಾದಿಸಿದ ತತ್ವವೆಂದರೆ ಜಗತ್ತಿನಲ್ಲಿರುವುದು, ʼಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರುʼ ಎಂಬುದು. ದೇವಾಲಯಗಳಲ್ಲಿ ತುಳಿತಕ್ಕೆ ಒಳಗಾದ ವರ್ಗದವರಿಗೆ ಪ್ರವೇಶ ಸಿಗದಿದ್ದಾಗ ರಕ್ತಕ್ರಾಂತಿ ಮಾಡದೇ ಜನರಿಗೆ ದೇವಾಲಯಗಳನ್ನು ನಿರ್ಮಿಸಿದರು” ಎಂದು ಹೇಳಿದರು.
“ಹಿಂದುಳಿದ ವರ್ಗದವರನ್ನು ಉದ್ಯೋಗ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮೆಲೆತ್ತುವ ಕಾರ್ಯದಲ್ಲಿ ತೊಡಗಿದ್ದರು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ ಅವರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದಾರೆ. ನಾರಾಯಣ ಗುರುಗಳ ತತ್ವ ಸಿದ್ದಾಂತ ಆದರ್ಶಗಳು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕಿದೆ” ಎಂದರು.
ನಾಮದಾರಿ ಸಮಾಜದ ಉಪಾಧ್ಯಕ್ಷ ಸುನೀಲ್ ಸೋನಿ ಮಾತನಾಡಿ, “ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬುವುದು ನಾರಾಯಣ ಗುರುಗಳ ತತ್ವವಾಗಿತ್ತು. ಹಿಂದುಳಿದ ವರ್ಗದವರಿಗೆ ದೇವಾಲಯಗಳಲ್ಲಿ ಪ್ರವೇಶಕ್ಕೆ ನಿರಾಕರಿಸಿದ ಸಮಯದಲ್ಲಿ ದೇವಾಲಯಗಳನ್ನು ನಿರ್ಮಿಸಿದವರು. ಅವರ ತತ್ವದಂತೆ ಎಲ್ಲ ಹಿಂದುಳಿದ ವರ್ಗದವರೂ ಒಂದೆ ಎಂಬ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದರು.
ಕಾರ್ಯಕ್ರಮಕ್ಕೂ ಮುನ್ನ ಕಾರವಾರ ತಹಶೀಲ್ದಾರ್ ನಿಶ್ಚಲ್ ನರೋನ್ಹಾ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಯುವಕರಿಗೆ ಉಚಿತ ತರಬೇತಿ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಾಮಾಜಿಕ ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ವನಿತಾ ಶೇಟ್ ನಿರೂಪಿಸಿ, ವಂದಿಸಿದರು.





