ಉತ್ತರ ಕನ್ನಡ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಾಗಿದ್ದು, ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್ಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಜೀವಹಾನಿ ಸಂಭವಿಸದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಾದ ಕೆ.ಲಕ್ಷ್ಮಿಪ್ರೀಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಗೋಕರ್ಣ ಮತ್ತು ಮುರುಡೇಶ್ವರ ಕಡಲ ತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವ ಪ್ರವಾಸಿಗರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಪಾಯಗಳ ಕುರಿತು ಸೂಚನಾ ಫಲಕಗಳನ್ನು ಬೀಚ್ನ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕು. ಅಪಾಯದ ಕುರಿತು ಸೈರನ್ ಮತ್ತು ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು. ಅಲ್ಲದೆ, ವಾಚ್ ಟವರ್ಗಳ ಮೂಲಕ ಪ್ರವಾಸಿಗರು ಅಪಾಯಕಾರಿ ಸಮುದ್ರ ಪ್ರದೇಶಗಳಿಗೆ ತೆರಳದಂತೆ ನಿರಂತರ ಗಮನಹರಿಸಲು ಸೂಚಿಸಲಾಯಿತು.
ಬೀಚ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೀವ ರಕ್ಷಕರನ್ನು ನೇಮಿಸುವುದರ ಜೊತೆಗೆ ಸಾಕಷ್ಟು ಸಂಖ್ಯೆಯ ಹೋಂ ಗಾರ್ಡ್ಗಳನ್ನು ನಿಯೋಜಿಸಬೇಕು, ಎಲ್ಲಾ ಬೀಚ್ಗಳಲ್ಲಿ ವಾಹನಗಳ ಪಾರ್ಕಿಂಗ್ಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಮತ್ತು ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ಬೋಟ್ಗಳಲ್ಲಿ ತೆರಳುವವರಿಗೆ ಕಡ್ಡಾಯವಾಗಿ ಜೀವ ರಕ್ಷಕ ಜಾಕೆಟ್ಗಳನ್ನು ಧರಿಸುವಂತೆ ನೋಡಿಕೊಳ್ಳಲು ಸೂಚಿಸಲಾಯಿತು. ಬೀಚ್ನಲ್ಲಿನ ಜೀವ ರಕ್ಷಕರಿಗೆ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಎಲ್ಲಾ ಸುರಕ್ಷತಾ ಪರಿಕರಗಳನ್ನು ಪೂರೈಸಿ, ಅವರಿಗೆ ಜೀವ ವಿಮೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಂಪೂರ್ಣವಾಗಿ ನೀಡಬೇಕು ಎಂದರು.
ಮುರುಡೇಶ್ವರ ಬೀಚ್ನಲ್ಲಿ ಅಪಾಯವಲ್ಲದ ಸಮುದ್ರ ಪ್ರದೇಶವನ್ನು ಗುರುತಿಸಿ ಮಾರ್ಕಿಂಗ್ ಮಾಡಿಸಬೇಕು, ಜೊತೆಗೆ ತುರ್ತು ಸಂದರ್ಭದಲ್ಲಿ ಪ್ರವಾಸಿಗರ ರಕ್ಷಣೆಗೆ ಜೆಟ್ ಸ್ಕೀ ಮತ್ತು ಪ್ರಥಮ ಚಿಕಿತ್ಸಾ ಕಿಟ್ಗಳು ಲಭ್ಯವಿರುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಿದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಗರಿಷ್ಠ ಸುರಕ್ಷತೆಯನ್ನು ಖಾತರಿಪಡಿಸಲು ಜಿಲ್ಲಾಡಳಿತದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಪ್ರವಾಸೋದ್ಯಮ, ಪೊಲೀಸ್, ಕಂದಾಯ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೇಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳಾ ಸಿಬ್ಬಂದಿಗೆ ಜಾತಿ ನಿಂದನೆ; ಪ್ರಕರಣ ದಾಖಲು
ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಿ ಪ್ರವಾಸಿಗರು ಸುರಕ್ಷಿತವಾಗಿ ಮರಳುವಂತೆ ನೋಡಿಕೊಳ್ಳಬೇಕು. ಈ ಕಾರ್ಯದಲ್ಲಿ ಯಾವುದೇ ಲೋಪಗಳಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಜೂಫಿಶಾನ್ ಹಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮಂಗಳಗೌರಿ ಭಟ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು





