ಉತ್ತರ ಕನ್ನಡ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಲು ಹಾಗೂ ಅವರಿಗೆ ನ್ಯಾಯ ಒದಗಿಸಲು ಪೊಲೀಸ್ ಇಲಾಖೆಯು ಸದಾ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ತಿಂಗಳ 4ನೇ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿಯಮಿತವಾಗಿ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ತಿಳಿಸಿದರು.
ಮಂಗಳವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪಂಗಡದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಸಮಸ್ಯೆಗಳಿಂದ ನೊಂದಿರುವ ಈ ಸಮುದಾಯದ ಜನರಿಗೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಡಿ ಭೇಟಿ ನೀಡುವ ಸಿಬ್ಬಂದಿಗೆ ಮಾಹಿತಿ ನೀಡಬಹುದು ಅಥವಾ 112 ಸಹಾಯವಾಣಿಗೆ ಕರೆ ಮಾಡಬಹುದು. ಇದರೊಂದಿಗೆ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ತಕ್ಷಣ ಸ್ಪಂದಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೂ ಪ್ರತಿ ತಿಂಗಳು ಕಡ್ಡಾಯವಾಗಿ ಕುಂದು ಕೊರತೆ ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಆಲಿಸಬೇಕು. ನೊಂದ ಜನತೆಯ ಕರೆಗಳನ್ನು ತಪ್ಪದೇ ಸ್ವೀಕರಿಸಿ, ಮಾನವೀಯತೆಯಿಂದ ಸ್ಪಂದಿಸುವಂತೆ ಅಧಿಕಾರಿಗಳಿಗೆ ಎಸ್ಪಿ ಅವರು ಸೂಚನೆ ನೀಡಿದರು.

ಇದೇ ವೇಳೆ, ಪೊಲೀಸ್ ಕಲ್ಯಾಣ ಮಂಟಪದಲ್ಲಿ ಪ.ಜಾತಿ ಮತ್ತು ಪಂಗಡದವರ ಕರಕುಶಲ ಮೇಳ ಹಾಗೂ ವಸ್ತು ಪ್ರದರ್ಶನ ಆಯೋಜಿಸಲು ಉಚಿತವಾಗಿ ಸ್ಥಳಾವಕಾಶ ನೀಡುವುದಾಗಿ ಅವರು ಪ್ರಕಟಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಮತ್ತು ಸಾರ್ವಜನಿಕರು ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.
ಪ್ರಮುಖವಾಗಿ ಜಿಲ್ಲೆಯಲ್ಲಿ ಸಲ್ಲಿಕೆಯಾಗುತ್ತಿರುವ ಬೋಗಸ್ ಜಾತಿ ಪ್ರಮಾಣಪತ್ರಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಲ್ಲಿಕೆಯಾಗುವ ನಕಲಿ ಪ್ರಮಾಣಪತ್ರಗಳ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ದೂರು ನೀಡಲು ಹೋದಾಗ ಸಂತ್ರಸ್ತರ ಮೇಲೆಯೇ ಕೌಂಟರ್ ಕೇಸ್ ದಾಖಲಿಸುವುದನ್ನು ತಪ್ಪಿಸಬೇಕು ಹಾಗೂ ಇಂತಹ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಇತರ ಇಲಾಖೆಗಳೂ ಸಮನ್ವಯತೆಯಿಂದ ನೆರವಾಗಬೇಕು ಎಂದು ವಿನಂತಿಸಿದರು.
ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?
ಇದಲ್ಲದೆ, ಕಾರವಾರದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ, ನಗರ ಪ್ರದೇಶದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ವಿವಿಧ ನಿಗಮಗಳ ಸಾಲ ಸೌಲಭ್ಯ ಪಡೆಯುವಲ್ಲಿನ ಅಡಚಣೆಗಳ ನಿವಾರಣೆ ಹಾಗೂ ಅತಿಕ್ರಮಣದಾರರಿಗೆ ‘ಫ್ರೂಟ್ಸ್’ ತಂತ್ರಾಂಶದಲ್ಲಿ ನೋಂದಣಿ ಮಾಡಲು ಎದುರಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.
ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಅಗತ್ಯವಿದೆ ಎಂದು ಮುಖಂಡರು ಸಭೆಯಲ್ಲಿ ತಿಳಿಸಿದರು.ಸಭೆಯ ಆರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಮರ್ಪಿಸಲಾಯಿತು ಹಾಗೂ ಸಂವಿಧಾನ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೃಷ್ಣಮೂರ್ತಿ, ಜಗದೀಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.





