ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಶ್ರೀ ಕ್ಷೇತ್ರ ಉಳವಿ ಚನ್ನಬಸವೇಶ್ವರ ಜಾತ್ರೆಯ ಸಂದರ್ಭದಲ್ಲಿ ಬಹಿರಂಗವಾಗಿ ನಡೆಯುತ್ತಿದ್ದ ‘ಅಂದರ್-ಬಾಹರ್’ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ.
ಪತ್ರಿಕೆಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜೋಯಿಡಾ ಪೊಲೀಸರು, ವಿಶೇಷ ತಂಡವನ್ನು ರಚಿಸಿ ಈ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಉಳವಿ ಜಾತ್ರೆಯಲ್ಲಿ ನಡೆದಿದ್ದೇನು? ಜಾತ್ರೆಯ ಸೋಗಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರಾಜಾರೋಷವಾಗಿ ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಕೂಡಲೇ, ಜೋಯಿಡಾ ಪಿ.ಎಸ್.ಐ ಮಹೇಶ ಬಸಪ್ಪ ಮಾಳಿ ಮತ್ತು ಅವರ ತಂಡ ಫೆಬ್ರವರಿ 01, 2026 ರಂದು ದಾಳಿ ನಡೆಸಿತು.

ಈ ಕಾರ್ಯಾಚರಣೆಯಲ್ಲಿ ಒಟ್ಟು 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34,030 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಜೋಯಿಡಾ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಇಂತಹ ಸುಪ್ರಸಿದ್ಧ ಜಾತ್ರೆಗಳಲ್ಲಿ ಇಷ್ಟು ಬಹಿರಂಗವಾಗಿ ಜೂಜಾಟ ನಡೆಯುತ್ತಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಭಕ್ತಾದಿಗಳು ಪವಿತ್ರ ಭಾವನೆಯಿಂದ ಬರುವ ಸ್ಥಳಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಪೊಲೀಸರು ಮತ್ತು ಜಾತ್ರಾ ಸಮಿತಿಗಳು ಮೊದಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.
ಈಗಾಗಲೇ ಜಿಲ್ಲೆಯಲ್ಲಿ ಸಾಲು ಸಾಲು ಐತಿಹಾಸಿಕ ಜಾತ್ರೆಗಳು ಪ್ರಾರಂಭವಾಗಲಿವೆ. ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ, ಮೂರು ವರ್ಷಕ್ಕೊಮ್ಮೆ ನಡೆಯುವ ಯಲ್ಲಾಪುರ ಮಾರಿಕಾಂಬಾ ಜಾತ್ರೆ ಹಾಗೂ ಮುಂಡಗೋಡ ಮಾರಿಕಾಂಬಾ ಜಾತ್ರೆಗಳು ಕೆಲವೇ ದಿನಗಳಲ್ಲಿ ಆರಂಭವಾಗಲಿವೆ.
ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಹುಲ್ಕುತ್ರಿ ಶಾಲೆಯಲ್ಲಿ ‘ಬಾನು ಬೆರಗು’: ಟೆಲಿಸ್ಕೋಪ್ ಮೂಲಕ ಆಕಾಶಕಾಯಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು
ಲಕ್ಷಾಂತರ ಭಕ್ತರು ಸೇರುವ ಈ ಮಹೋತ್ಸವಗಳಲ್ಲಿ ಉಳವಿ ಜಾತ್ರೆಯಂತೆ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದೆ.
ಈ ಜಾತ್ರೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹೇಗಿರುತ್ತದೆ? ಜಾತ್ರಾ ಮಹೋತ್ಸವ ಸಮಿತಿಗಳು ಜೂಜಾಟ ಮತ್ತು ಅಕ್ರಮಗಳನ್ನು ತಡೆಯಲು ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿವೆ? ಜೂಜುಕೋರರಿಗೆ ಮತ್ತು ಕಾನೂನು ಉಲ್ಲಂಘಿಸುವವರಿಗೆ ಪೊಲೀಸರು ಯಾವ ರೀತಿ ಬಿಸಿ ಮುಟ್ಟಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಬಾರಿ ಜಾತ್ರೆಗಳು ಶಾಂತಿಯುತವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಲಿ ಎಂಬುದು ಸಾರ್ವಜನಿಕರ ಮತ್ತು ಭಕ್ತರ ಆಶಯವಾಗಿದೆ.





