ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ಮಾರ್ಚ್ 2026ರ ತಿಂಗಳಿಗೆ ಅನ್ವಯವಾಗುವಂತೆ, ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿರುವ 639 ಅನಿಲ ರಹಿತ ಪಡಿತರ ಚೀಟಿದಾರರಿಗೆ ಹಾಗೂ ಸೀಮೆಎಣ್ಣೆ ಪಡೆಯಲು ಒಪ್ಪಿಗೆ ನೀಡಿರುವ 1,89,086 ಅನಿಲ ಸಹಿತ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ 3 ಲೀಟರ್ನಂತೆ ಸೀಮೆಎಣ್ಣೆಯನ್ನು ಮರು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಸೀಮೆಎಣ್ಣೆ ನೀಡುತ್ತಿರುವುದು ಕಂಡುಬಂದಲ್ಲಿ ಅಥವಾ ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷಗಳ ಕುರಿತು ದೂರುಗಳು ಸ್ವೀಕೃತವಾದಲ್ಲಿ ಅಂತಹ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ
ಪಡಿತರ ಚೀಟಿದಾರರಿಗೆ ವಿತರಣೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾದಲ್ಲಿ ತಕ್ಷಣವೇ ತಮ್ಮ ತಾಲೂಕಿನ ಆಹಾರ ಶಿರಸ್ತೇದಾರರನ್ನು ಅಥವಾ ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರವಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.





