ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕುಡಿಯುವ ನೀರು ಹಾಗೂ ರಸ್ತೆಗಳಂತಹ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು.
ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ.
ಸಂವಿಧಾನದ ಆಶಯದಂತೆ ಸಮಾನತೆ ಮತ್ತು ಸರ್ವರ ಏಳಿಗೆಗಾಗಿ ಶ್ರಮಿಸುತ್ತಿರುವ ಸರ್ಕಾರ, ಬಡವರು ಹಾಗೂ ಶೋಷಿತರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.
ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಮೊದಲ ಆದ್ಯತೆ ನೀಡಲಾಗಿದ್ದು, ನಗರ ಪ್ರದೇಶಗಳಲ್ಲಿ ದಿನದ 24 ಗಂಟೆ ಕುಡಿಯುವ ನೀರು ಪೂರೈಸಲು 700 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ. ಹೊನ್ನಾವರದ ಶರಾವತಿ ನದಿಗೆ 200 ಕೋಟಿ ರೂ. ವೆಚ್ಚದ ಬ್ರಿಡ್ಜ್ ಕಮ್ ಬ್ಯಾರೇಜ್ ಮಂಜೂರಾಗಿದೆ.

ಇದಲ್ಲದೆ, 200 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ 13 ಬಂದರುಗಳ ನವೀಕರಣ ಕಾರ್ಯ ನಡೆಯುತ್ತಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು 10 ದ್ವೀಪಗಳನ್ನು ಗುರುತಿಸಲಾಗಿದ್ದು, ಇವುಗಳ ಅಭಿವೃದ್ಧಿಯಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಲಭಿಸಲಿದೆ ಎಂದು ತಿಳಿಸಿದರು.
ಕಾರವಾರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಈಗಾಗಲೇ ಜನ ಸೇವೆಯಲ್ಲಿದ್ದು, ಮುಂಬರುವ ಬಜೆಟ್ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಘೋಷಣೆಯಾಗಲಿದೆ ಎಂದು ಸಚಿವರು ಭರವಸೆ ನೀಡಿದರು. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿವೆ.
ಶಕ್ತಿ ಯೋಜನೆಯಡಿ ಮಹಿಳೆಯರು 405 ಕೋಟಿ ರೂ. ಮೌಲ್ಯದ ಉಚಿತ ಪ್ರಯಾಣ ಬೆಳೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 3,36,879 ಮಹಿಳೆಯರ ಖಾತೆಗೆ ಒಟ್ಟು 1,299 ಕೋಟಿ ರೂ. ಜಮೆ ಮಾಡಲಾಗಿದೆ. ಅಂತೆಯೇ ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಮೂಲಕವೂ ಜಿಲ್ಲೆಯ ಜನತೆಗೆ ಕೋಟ್ಯಂತರ ರೂಪಾಯಿಗಳ ನೆರವು ನೀಡಲಾಗಿದೆ ಎಂದು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಜೋಯಿಡಾ | ಜಗಲಬೇಟ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ಕಾಡುಕೋಣ ಬಲಿ; ಗ್ರಾಮಸ್ಥರಲ್ಲಿ ಮನೆಮಾಡಿದ ಭೀತಿ
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಇಲಾಖೆಗಳ ಉತ್ತಮ ಅಧಿಕಾರಿಗಳಿಗೆ ‘ಸರ್ವೋತ್ತಮ ಸೇವಾ ಪ್ರಶಸ್ತಿ’, ಅಂಗಾಂಗ ದಾನಿಗಳ ಕುಟುಂಬಕ್ಕೆ ಅಭಿನಂದನೆ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಮಾಡಲಾಯಿತು.
ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಶಾಸಕರಾದ ಸತೀಶ್ ಕೆ. ಸೈಲ್, ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿ.ಪಂ. ಸಿಇಒ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.





