ಉತ್ತರ ಕನ್ನಡ: ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಹಳ್ಳಿಗಳ ಮೂಲಸೌಕರ್ಯ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
ಮುಂಡಗೋಡ ತಾಲ್ಲೂಕಿನ ಬೆಡ್ಸಗಾಂವ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಳಗೇರಿ ಗ್ರಾಮದಲ್ಲಿ 95 ಲಕ್ಷ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ಹಮ್ಮಿಕೊಳ್ಳಲಾದ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಗಮ ಸಂಚಾರದಿಂದ ಮಾತ್ರ ಹಳ್ಳಿಗಳಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆಯಲು ಸಾಧ್ಯ. ಈ ರಸ್ತೆಯು ಜಳಗೇರಿ ಮತ್ತು ಸುತ್ತಮುತ್ತಲ ಗ್ರಾಮಸ್ಥರ ದಶಕಗಳ ಸಂಚಾರ ಸಮಸ್ಯೆಗೆ ಮುಕ್ತಿ ನೀಡಲಿದೆ ಎಂದು ತಿಳಿಸಿದರು.

ಬಳಿಕ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಕಲಾಂಗ ಚೇತನ ಅರ್ಹ ಫಲಾನುಭವಿಗಳಿಗೆ ಶಾಸಕರು ತ್ರಿಚಕ್ರ ವಾಹನ ಹಾಗೂ ವಿಲ್ ಚೇರ್ ವಿತರಿಸಿದರು. ಶಕ್ತಿಹೀನರ ಬಾಳಿಗೆ ಆಸರೆಯಾಗುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ಈ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | 108 ಅಂಬ್ಯುಲೆನ್ಸ್ನಲ್ಲಿ ಸುರಕ್ಷಿತ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿದ ತಾಯಿ
ನಂತರ ಬನವಾಸಿಯ ಪಿ.ಎಂ.ಶ್ರೀ ಮಾದರಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯವಾದ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಶಿಕ್ಷಣವು ಸಮಾಜದ ಭದ್ರ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಪೂರಕ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮುಂಡಗೋಡ ಮತ್ತು ಬನವಾಸಿ ಭಾಗದ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.





