ಉತ್ತರ ಕನ್ನಡ: ಕರ್ನಾಟಕ ರಾಜ್ಯದಲ್ಲಿ ನೂತನ ಜೈವಿಕ ಇಂಧನ ರಚನೆ ಮತ್ತು ಈ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ. ಸುಧೀಂದ್ರ ಅವರು ತಿಳಿಸಿದ್ದಾರೆ.
ಬುಧವಾರ ಕಾರವಾರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿರುವ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿ.
ರಾಜ್ಯದ ಜೈವಿಕ ಇಂಧನ ಸಂಶೋಧನಾ ಕೇಂದ್ರಗಳು, ಜೈವಿಕ ಇಂಧನ ಉದ್ಯಾನಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಗುಣಮಟ್ಟ ಖಾತ್ರಿ ಪ್ರಯೋಗಶಾಲೆಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ.
ಇವುಗಳ ಸಂಘಟಿತ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ಜಿಲ್ಲೆಯಲ್ಲಿ ಎರಡು ವಿಶಿಷ್ಟ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಕಾರವಾರದ ಕೇಂದ್ರವು ಕಡಲ ತೀರದಲ್ಲಿ ಲಭ್ಯವಿರುವ ಜೈವಿಕ ಇಂಧನ ಸಂಪನ್ಮೂಲಗಳ ಮೇಲೆ ಬೆಳಕು ಚೆಲ್ಲುತ್ತಿದ್ದರೆ, ಸಿರ್ಸಿಯ ಅರಣ್ಯ ಕಾಲೇಜಿನ ಕೇಂದ್ರವು ಅರಣ್ಯ ಆಧಾರಿತ ಸಂಪನ್ಮೂಲಗಳ ಕುರಿತು ಕೇಂದ್ರೀಕೃತ ಸಂಶೋಧನೆಯಲ್ಲಿ ತೊಡಗಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅವರು ಮಾತನಾಡಿ, ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಜೈವಿಕ ಇಂಧನ ಘಟಕವಿರುವುದರಿಂದ ಕಾರವಾರ ಮಾತ್ರವಲ್ಲದೆ ನೆರೆಯ ಗೋವಾ ರಾಜ್ಯದ ವಿದ್ಯಾರ್ಥಿಗಳಿಗೂ ಸಂಶೋಧನೆ ಮತ್ತು ಮಾಹಿತಿ ಪಡೆಯಲು ಅನುಕೂಲವಾಗಿದೆ.
ಈ ಸುದ್ದಿ ಓದಿದ್ದೀರಾ? ಕಾರವಾರ | ಕೆಫೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿ
ಇಲ್ಲಿನ ಪ್ರಾತ್ಯಕ್ಷಿಕೆಗಳು ಬಯೋ ಡೀಸೆಲ್ ಉತ್ಪಾದನೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿವೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಎಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಬಕ್ಷ್, ವಲಯ ಅರಣ್ಯಾಧಿಕಾರಿ ಕಿರಣ್ ಮಾನವಾಚಾರಿ, ಕಾರವಾರ ಕೇಂದ್ರದ ಸಂಯೋಜಕ ರೋಹನ್ ಬುಜಲೆ ಹಾಗೂ ವಿಜ್ಞಾನ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.





