ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಶೀಘ್ರದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಳ್ಳುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಾರ್ವಜನಿಕ ಸಭೆಯಲ್ಲಿ ಘೋಷಿಸಿದ್ದಾರೆ.
ಆಸ್ಪತ್ರೆಗೆ ಬೇಕಾದ ಜಮೀನು ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಸ್ತಾವಿತ ಯೋಜನೆಯಡಿ ಮೆಡಿಕಲ್ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಜೊತೆಗೆ ಒಟ್ಟು ಸುಮಾರು 18 ಕಾಲೇಜುಗಳು ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಈ ಮಹತ್ವಾಕಾಂಕ್ಷೆಯ ಯೋಜನೆಗೆ ಒಟ್ಟು 30 ಎಕರೆ ಭೂಮಿ ಅಗತ್ಯವಿದ್ದು, ಈ ಹಿಂದೆ ಜಮೀನು ಹಂಚಿಕೆ ಕುರಿತು ಕೆಲವು ವಿರೋಧ ವ್ಯಕ್ತವಾಗಿತ್ತು, ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಸುಸಜ್ಜಿತ ಆಸ್ಪತ್ರೆ ಅತ್ಯಗತ್ಯವಾಗಿದೆ ಎಂದು ಶಾಸಕರು ಹೇಳಿದರು. ಯೋಜನೆಗಾಗಿ ಜಾಗದ ಕೊರತೆ ಎದುರಾಗದಂತೆ ಮುರುಡೇಶ್ವರದ ಸಮೀಪದ ಮಾವಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ, ಹೋಟೆಲ್ ಹಿಂಭಾಗದಲ್ಲಿರುವ ಸುಮಾರು 30 ಎಕರೆ ಜಾಗವನ್ನು ಈಗಾಗಲೇ ಕಾಯ್ದಿರಿಸಲಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ? ಕುಮಟಾ | ಚತುಷ್ಪಥ ರಸ್ತೆ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಎಚ್ಚರಿಕೆ
ಆರಂಭದಲ್ಲಿ ಪ್ರಸ್ತಾಪಿಸಿದ ಜಾಗ ಲಭ್ಯವಾಗದಿದ್ದರೂ ಸಹ, ಮಾವಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿಯೇ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುರುಡೇಶ್ವರದಲ್ಲೇ ಆಗುತ್ತದೆ; ಇದರ ಬಗ್ಗೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ದೃಢಪಡಿಸಿದರು.
ಜಿಲ್ಲೆಯಲ್ಲಿ ದೀರ್ಘಕಾಲದಿಂದ ಸುಸಜ್ಜಿತ ಆಸ್ಪತ್ರೆಯ ಬೇಡಿಕೆ ಇದ್ದು, ಈ ಯೋಜನೆ ಜಾರಿಗೆ ಬಂದರೆ ಜಿಲ್ಲೆಯ ಜನರಿಗೆ ಆರೋಗ್ಯ ಸೇವೆಗಳನ್ನು ಸುಲಭವಾಗಿ ಸಿಗುವಂತೆ ಮಾಡಲಿದೆ. ಜೊತೆಗೆ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಸ್ಥಳೀಯ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಅನುಕೂಲವಾಗಲಿದೆ.





