ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಶಾಲೆಗಳಿಗೆ ಘೋಷಿಸಲಾಗಿದ್ದ ರಜೆಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಉತ್ತರ ಕನ್ನಡ, ಕಾರವಾರ ತಾಲೂಕಿನಾದ್ಯಂತ ಭಾರಿ ಮಳೆಯಿಂದಾಗಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ನೀಡಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, 2005ರ ವಿಪತ್ತು ನಿರ್ವಹಣಾ ಕಾಯ್ದೆಯ ಕಲಂ 34(ಎಮ್) ಅಡಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದರು.

ಈ ರಜಾ ಅವಧಿಯಲ್ಲಿ ನಷ್ಟವಾದ ಬೋಧನಾ ಸಮಯವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದರ ಅನ್ವಯ, ಆಗಸ್ಟ್ 16ರಿಂದ ಆರಂಭವಾಗುವ ಪ್ರತಿ ಶನಿವಾರದಂದು ಪೂರ್ಣ ದಿನ ಶಾಲಾ ತರಗತಿಗಳನ್ನು ನಡೆಸುವಂತೆ ಆದೇಶಿಸಲಾಗಿದೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ಸಂಬಂಧಿಸಿದ ಎಲ್ಲಾ ಶಾಲೆಗಳು ಮತ್ತು ಶಿಕ್ಷಣಾಧಿಕಾರಿಗಳು ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ
ಈ ನಿರ್ದೇಶನವು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ತಲುಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.





