ಉತ್ತರ ಕನ್ನಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಅವು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ನಿಜವಾದ ಸೂಚಕಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ ಹೊನ್ನಾವರದ ಗುಣವಂತೆಯ ಕೆಳಗಿನೂರು ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’ವನ್ನು ಉದ್ಘಾಟಿಸಿ ಹೇಳಿದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಪ್ರತಿ ವರ್ಷ ಸುಮಾರು 1,500 ಕೋಟಿ ರೂಪಾಯಿ ಹಾಗೂ ರಾಜ್ಯಾದ್ಯಂತ 50 ಸಾವಿರ ಕೋಟಿ ರೂಪಾಯಿಗಳ ಪ್ರಯೋಜನ ತಲುಪುತ್ತಿದೆ.
ಬಡ ಜನರ ಮುಖದಲ್ಲಿನ ನಗು ಮತ್ತು ನೆಮ್ಮದಿಯೇ ನಿಜವಾದ ಅಭಿವೃದ್ಧಿಯ ಸಂಕೇತ ಎಂದ ಸಚಿವರು, ಈ ಯೋಜನೆಗಳು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದ್ದು, ಅಲ್ಲಿನ ಸರ್ಕಾರಗಳು ನಮ್ಮನ್ನು ಅನುಸರಿಸುತ್ತಿವೆ ಎಂದು ಹೆಮ್ಮೆ ನಮಗೆ ಇದೆ ಎಂದು ತಿಳಿಸಿದರು. ಮುಂಬರುವ ಬಜೆಟ್ 4.50 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರವನ್ನು ಹೊಂದಿರಲಿದೆ ಎಂಬ ಮಾಹಿತಿಯನ್ನು ಮಂಕಾಳ ವೈದ್ಯ ಅವರು ಈ ಸಂದರ್ಭದಲ್ಲಿ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರು, ರಾಜ್ಯದಲ್ಲಿ ಇದುವರೆಗೆ 1,17,421 ಕೋಟಿ ರೂಪಾಯಿಗಳನ್ನು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
‘ಶಕ್ತಿ’ ಯೋಜನೆಯಡಿ ರಾಜ್ಯದಲ್ಲಿ 668 ಕೋಟಿ ಮಹಿಳೆಯರು ಪ್ರಯಾಣಿಸಿರುವುದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದ್ದು, ಈ ಯೋಜನೆಯ ಯಶಸ್ಸಿಗಾಗಿ ಹೊಸದಾಗಿ 5,000 ಬಸ್ಸುಗಳ ಖರೀದಿ ಮತ್ತು ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಯೋಜನೆಯ ಪ್ರಚಾರಕ್ಕಾಗಿ ‘ಮನೆಗೆ 5 ಗ್ಯಾರಂಟಿ, ಮನೆ ಮುಂದೆ ರಂಗೋಲಿ’ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮುಂಡಗೋಡ–ಹಳಿಯಾಳ ಗ್ರಾಮಗಳ ಜನತೆಗೆ ಸುವರ್ಣಾವಕಾಶ: ಮೀನು ಮಾರಾಟ ವಾಹನಕ್ಕೆ ಸಿಗಲಿದೆ 90% ಸಬ್ಸಿಡಿ!
ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಅವರು ಜಿಲ್ಲೆಯ ಪ್ರಗತಿಯ ವಿವರ ನೀಡಿ, ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 17 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದು, 532 ಕೋಟಿ ರೂ.ಗಳ ಉಚಿತ ಟಿಕೆಟ್ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 3.37 ಲಕ್ಷ ಫಲಾನುಭವಿಗಳಿಗೆ 1,599 ಕೋಟಿ ರೂ. ತಲುಪಿದ್ದು, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಂಡಿವೆ ಎಂದು ಜಿಲ್ಲೆಯ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ. 99ರಷ್ಟು ಪ್ರಗತಿ ಸಾಧಿಸಿರುವುದನ್ನು ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮೋಹನ್ ಮೈಸೂರು ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದೆಯೇ ಹೊರತು ರಾಜ್ಯ ದಿವಾಳಿಯಾಗಿಲ್ಲ.
ಜಿ.ಎಸ್.ಟಿ ಸಂಗ್ರಹಣೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಆರ್ಥಿಕ ಅಂಕಿಅಂಶಗಳ ಸಮೇತ ವಿವರಿಸಿದರು. ಫಲಾನುಭವಿ ಅನಿತಾ ಅವರು ಮಾತನಾಡಿ, ಈ ಯೋಜನೆಗಳಿಂದ ತಮಗೆ ತಿಂಗಳಿಗೆ 10 ರಿಂದ 12 ಸಾವಿರ ರೂಪಾಯಿ ಉಳಿತಾಯವಾಗುತ್ತಿದ್ದು, ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸುತ್ತಿರುವುದಾಗಿ ಗ್ಯಾರಂಟಿ ಯೋಜನೆಗಳಿಂದ ತಮಗೆ ಆದ ಉಪಯೋಗದ ಬಗ್ಗೆ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿ.ಪಂ. ಸಿಇಒ ಡಾ. ದಿಲೀಶ್ ಶಶಿ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ವಿವಿಧ ತಾಲೂಕುಗಳ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.





