ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸಿ ತಾಣಗಳು ರಾಜ್ಯದ ಪ್ರವಾಸೋದ್ಯಮದ ಬೆನ್ನೆಲುಬಾಗಿದ್ದು, ಈ ಭಾಗದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಭಾನುವಾರ ಹಳಿಯಾಳದಲ್ಲಿ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ₹798 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಸಮಾವೇಶ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಇವುಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನೀಡುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರವಾಸೋದ್ಯಮವು ಕೇವಲ ಆದಾಯದ ಮೂಲವಲ್ಲ, ಅದು ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ವೇದಿಕೆಯೂ ಹೌದು ಎಂದು ಸಚಿವರು ಹೇಳಿದರು.
ಈ ಬಾರಿಯ ಬಜೆಟ್ನಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ 100 ಡಾರ್ಮಿಟರಿಗಳ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಅಧ್ಯಯನ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು.
ಹಳಿಯಾಳ ಮತ್ತು ದಾಂಡೇಲಿ ಭಾಗದಲ್ಲಿ ತೋಟಗಳ ನಿರ್ಮಾಣಕ್ಕೆ 1 ಕೋಟಿ ರೂ., ಕ್ಯಾಸಲ್ ರಾಕ್ ನೇಚರ್ ಕ್ಯಾಂಪ್ ಅಭಿವೃದ್ಧಿಗೆ 50 ಲಕ್ಷ ರೂ. ಹಾಗೂ ಸಂಚಾರಿ ರಾಕ್ ಟೂರಿಸ್ಟ್ ತಾಣದ ಅಭಿವೃದ್ಧಿಗೆ 50 ಲಕ್ಷ ರೂ.ಗಳನ್ನು ಘೋಷಿಸಲಾಗಿದೆ.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ಆರ್.ವಿ. ದೇಶಪಾಂಡೆ ಅವರು ಮಾತನಾಡಿ, ಬೆಲೆಯೇರಿಕೆ ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಗೆ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಯೇ ರಾಮಬಾಣವಾಗಿದೆ. ಈ ಎರಡು ಕ್ಷೇತ್ರಗಳು ಬೆಳೆದರೆ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.
ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ
ಹಳಿಯಾಳದ ಹೊಸ ಸಮಾವೇಶ ಕೇಂದ್ರವು ಕೇವಲ ಕಟ್ಟಡವಾಗದೆ, ನಿರಂತರ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು ಎಂದು ಅವರು ಆಶಿಸಿದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ಮಾತನಾಡಿ, ಜಿಲ್ಲೆಯ ಜಲಪಾತಗಳು,
ಕಡಲತೀರಗಳು ಮತ್ತು ದ್ವೀಪಗಳನ್ನು ಪ್ರವಾಸಿಗರ ಆಕರ್ಷಣೀಯ ಕೇಂದ್ರಗಳನ್ನಾಗಿ ಮಾಡಲು ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ನಂತರ ಕುದ್ರೋಳಿ ಗಣೇಶ್ ತಂಡದವರಿಂದ ಮ್ಯಾಜಿಕ್ ಶೋ ನಡೆಯಿತು. ಇದೇ ಸಂದರ್ಭದಲ್ಲಿ ಬೋಶ್ ಇಂಡಿಯಾ ಫೌಂಡೇಶನ್ ವತಿಯಿಂದ ಹಳಿಯಾಳದ ಐದು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್ಗಳನ್ನು ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.





