‘ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ ಯಾಮಾರಿಸುತ್ತಿದ್ದಾರೆ. ಸುಳ್ಳು ಹೇಳುವುದೇ ಅವರ ಕೆಲಸ. ಖಜಾನೆ ಖಾಲಿಯಾದರೆ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವೇ? ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಬದ್ಧವಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ 74 ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿ, “ಕಾಂಗ್ರೆಸ್ ಪಕ್ಷ ಇನ್ನೂ ಎರಡೂವರೆ ವರ್ಷ ಅಧಿಕಾರದಲ್ಲಿ ಮುಂದುವರೆಯಲಿದೆ, ಜನರ ಆಶೀರ್ವಾದ ಕಾಂಗ್ರೆಸ್ ಪಕ್ಷದ ಮೇಲಿರಲಿ. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಖಜಾನೆ ಖಾಲಿಯಾಗಿದೆ ಎನ್ನುತ್ತಾರೆ. ಖಜಾನೆ ಖಾಲಿಯಾಗಿದ್ದರೆ ಅಭಿವೃದ್ಧಿ ಕೆಲಸ ಆಗುತ್ತಿರಲಿಲ್ಲ. ಬಿಜೆಪಿ ಮತ ಕಳ್ಳತನ ಮಾಡಿ ಅಧಿಕಾರಕ್ಕೆ ಬಂದಿದೆ. ಅವರಿಗೆ ಮಾನ ಮರ್ಯಾದೆ ಇಲ್ಲ. ಮಹದೇವಪುರ ಕ್ಷೇತ್ರದಲ್ಲಿ ಒಂದೇ ಮನೆಯಲ್ಲಿ 80 ವೋಟುಗಳನ್ನು ಕದ್ದಿದ್ದಾರೆ” ಎಂದು ನೇರ ಆರೋಪ ಮಾಡಿದರು.
“ಸಮಾಜದಲ್ಲಿ ಇಂದಿಗೂ ಅಸಮಾನತೆ ಇದ್ದು, ಅದನ್ನು ನಿವಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಬಿಜೆಪಿ ಸಮಾಜದಲ್ಲಿರುವ ಅಸಮಾನತೆಯ ಬಗ್ಗೆ ಮಾತಾಡುವುದಿಲ್ಲ. ವಿನಾಕಾರಣ ಸರಕಾರದ ಬಗ್ಗೆ ಆರೋಪ ಮಾಡುತ್ತಿದೆ. ಕೆರೆ ತುಂಬಿಸುವ ಯೋಜನೆಯಿಂದ 1.76 ಲಕ್ಷ ಜನರಿಗೆ ಹಾಗೂ ಪ್ರಾಣಿ-ಪಕ್ಷಗಳಿಗೆ ಅನುಕೂಲವಾಗಲಿದ್ದು, 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಪ್ರಸ್ತುತ 30 ಲಕ್ಷ ಹೆಕ್ಟೇರ್ಗೆ ನೀರಾವರಿ ಕಲ್ಪಿಸಲಾಗಿದೆ” ಎಂದರು.
“ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆಯೆಂದು ಆರೋಪ ಮಾಡುತ್ತಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡಿದಿದ್ದೆವೆ. ಶಕ್ತಿ ಯೋಜನೆಯಿಂದ 580 ಕೋಟಿ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ರೈತರ ಪಂಪ್ಸೆಟ್ಗಳಿಗೆ ₹19,000 ಕೋಟಿ ಸಬ್ಸಿಡಿ ನೀಡಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಒಟ್ಟಾರೆ ₹1 ಲಕ್ಷ ಕೋಟಿ ಖರ್ಚು ಮಾಡಲಾಗಿದೆ” ಎಂದು ಸಿಎಂ ಮಾಹಿತಿ ನೀಡಿದರು.
ಇದನ್ನೂ ಓದಿದ್ದೀರಾ? ಐಕ್ಯತೆಗೆ ಸಾಕ್ಷಿಯಾದ ಗುರ್ಲಾಪೂರ: ಐತಿಹಾಸಿಕ ರೈತ ಹೋರಾಟಗಳ ಪಟ್ಟಿ ಸೇರಿದ ಕಬ್ಬು ಬೆಳೆಗಾರರ ಧರಣಿ
“ಕಬ್ಬಿನ ಎಫ್ಆರ್ಪಿ ದರ ನಿಗದಿಪಡಿಸುವ ಕೇಂದ್ರ ಸರ್ಕಾರದ ಜವಾಬ್ದಾರಿಯ ಬಗ್ಗೆ ಸಂಸದ ಪ್ರಲ್ಹಾದ ಜೋಶಿ ಮಾತನಾಡುತ್ತಿಲ್ಲ. ನಮ್ಮ ಸರ್ಕಾರ ಕಾರ್ಖಾನೆ ಮಾಲೀಕರ ಸಭೆ ಕರೆದು ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿದೆ. ಶಾಸಕರು ಎರಡೂವರೆ ವರ್ಷಗಳಲ್ಲಿ ₹1,600 ಕೋಟಿ ಅನುದಾನ ತಂದಿದ್ದಾರೆ. ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ನಮ್ಮಲ್ಲಿ ಇನ್ನೂ ಸಾಕಷ್ಟು ಹಣವಿದೆ. ಖಜಾನೆ ಖಾಲಿಯಾಗಿದ್ದರೆ ಇಷ್ಟೆಲ್ಲ ಅಭಿವೃದ್ಧಿ ಮಾಡುವುದಕ್ಕೆ ಸಾಧ್ಯವಾಗುತ್ತಿತ್ತೆ?” ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೂಡ್ಲಿಗಿ ಶಾಸಕ ಡಾ. ಎನ್ ಟಿ ಶ್ರೀನಿವಾಸ್ ಅವರ ಸರಳತೆ ಮತ್ತು ಸಜ್ಜನಿಕೆಯನ್ನು ಶ್ಲಾಘಿಸಿದ ಸಿಎಂ, “ಇಲ್ಲಿಯ ಶಾಸಕರ ಅಪ್ರೋಚ್ ನೋಡಿದ ತಕ್ಷಣ ಅನುದಾನ ನೀಡಬೇಕು ಎನಿಸುತ್ತದೆ. ಕಳೆದ ಎರಡೂವರೆ ವರ್ಷಗಳಲ್ಲಿ ಶಾಸಕರು ಅಸಾಧ್ಯವಾದ ಕೆಲಸಗಳನ್ನು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.





