ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆದ ಎರಡು ದಿನಗಳಿಂದ ತಾರಾಪುರ ಗ್ರಾಮ ಸಂಪೂರ್ಣವಾಗಿ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭೀಮಾನದಿ ಪ್ರವಾಹಕ್ಕೆ ಸಿಲುಕಿದ್ದ ಮೂವರು ಗರ್ಭಿಣಿಯರು, ಇಬ್ಬರು ಬಾಲಕರು, 1 ಮಗು ಸೇರಿದಂತೆ ಒಟ್ಟು 10 ಮಂದಿಯನ್ನು ರಕ್ಷಿಸಲಾಗಿದೆ. ನದಿ ತೀರದ ಹಲವಾರು ಗ್ರಾಮಗಳಲ್ಲಿ ನೀರು ನುಗ್ಗಿ ಮನೆಗಳು ಸುತ್ತುವರಿದ ಹಿನ್ನೆಲೆಯಲ್ಲಿ ಸಂತ್ರಸ್ತರನ್ನು ಸ್ಥಳಾಂತರಿಸಲು ಮೂರು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 600ಕ್ಕೂ ಹೆಚ್ಚು ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ದೇವಣಗಾಂವ, ತವರಾಖೆಡ, ಬ್ಯಾಡಗಿಹಾಳ, ಕುಮಸಗಿ, ಶೇಂಬವಾಡ, ಕಡ್ಲೆವಾಡ, ಶಿರಸಗಿ ಸೇರಿದಂತೆ ನದಿ ತೀರದ ಅನೇಕ ಗ್ರಾಮಗಳಲ್ಲಿ ಪ್ರವಾಹದ ನೀರು ನುಗ್ಗಿ ಜನರಲ್ಲಿ ಆತಂಕ ಉಂಟುಮಾಡಿದೆ. ಬಸವನಬಾಗೇವಾಡಿ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 47 ಮನೆಗಳು ನೀರಿನೊಳಗೆ ಮುಳುಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ತಾರಾಪುರ, ತಾವರಖೆಡ ಮತ್ತು ಕುಮಸಗಿ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.
ಶುಕ್ರವಾರ ಆಲಮೇಲ ತಹಶೀಲ್ದಾರ್ ಧನಪಾಲ ಶೆಟ್ಟಿ ದೇವುರಾ ಅವರು ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು. ಕುಮಸಗಿ ಗ್ರಾಮದಲ್ಲಿ ಸಂಚರಿಸಿ, ಹಾನಿಗೊಳಗಾದ ಮನೆಗಳು ಮತ್ತು ಬೆಳೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳದಲ್ಲೇ ತಂಗಿ ಯಾವುದೇ ತುರ್ತು ಪರಿಸ್ಥಿತಿ ಉಂಟಾಗದಂತೆ ಕ್ರಮ ಕೈಗೊಂಡಿದ್ದಾರೆ.
ಭೀಮಾ ನದಿಯ ನೀರು ಸುತ್ತುವರಿದ ಪರಿಣಾಮ ಹಳೆ ತಾರಾಪುರ ಗ್ರಾಮ ಸಂಪೂರ್ಣವಾಗಿ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಹೊಸ ತಾರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ತಹಶೀಲ್ದಾರ ಧನಪಾಲ ಶೆಟ್ಟಿ, ಕಡಣಿ ಗ್ರಾಮ ಪಂಚಾಯಿತಿ ಪಿಡಿಓ ಶರಣಗೌಡ ಕಡ್ಲೆವಾಡ ಮತ್ತು ತಾರಾಪುರ ಗ್ರಾಮಸಾಯಕ ಮಡಿವಾಳಪ್ಪ ಬಿರಾದಾರ ಸ್ಥಳ ಪರಿಶೀಲನೆ ನಡೆಸಿದರು. ದೇವಣಗಾಂವ ಮತ್ತು ಕುಮಸಗಿ ಗ್ರಾಮಗಳಲ್ಲಿಯೂ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.
ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಸೋಲಾಪುರ ಜಿಲ್ಲೆಯಲ್ಲಿ ಸೀನಾ, ಕೊಳೆಗಾವ್, ಭೀಮಾ ಬೋರಿ ನದಿಗಳು ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ 431 ಶಾಲೆಗಳು ಜಲಾವೃತಗೊಂಡಿವೆ ಎಂದು ವರದಿಯಾಗಿದೆ.


ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ನಿಂದ ಗುರುವಾರ 28 ಗೇಟ್ಗಳನ್ನು ತೆರೆಯಲಾಗಿದ್ದು, ಸುಮಾರು 3.55 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಸೀನಾ ನದಿಯಿಂದ 2.15 ಲಕ್ಷ ಕ್ಯೂಸೆಕ್, ಉಜನಿ ಮತ್ತು ವೀರ ಜಲಾಶಯಗಳಿಂದ 80 ಸಾವಿರ ಕ್ಯೂಸೆಕ್ ನೀರು ಸೇರಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹರಿದುಬರುತ್ತಿದೆ. ಆದರೆ, ಸೀನಾ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಮುಂದಿನ ಎರಡು ದಿನಗಳಲ್ಲಿ ಪ್ರವಾಹ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಯುವ ಸಾಧ್ಯತೆಯಿದೆ ಎಂದು ಅಜ್ಜಲಪುರ ಕೆಎನ್ಎನ್ಎಲ್ಎ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ಕುಮಾರ್ ಸಜ್ಜನ್ ತಿಳಿಸಿದ್ದಾರೆ.
ಇದನ್ನೂ ಓದಿ: ವಿಜಯಪುರ | ಭೀಮಾ ನದಿಯ ರೌದ್ರ ರೂಪ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ಪ್ರವಾಹದ ಪರಿಣಾಮ ಇಂಡಿ ಪಟ್ಟಣದ ಅಗರಖೇಡಾ ರಸ್ತೆಯಲ್ಲಿರುವ ಶಾಂತು ಧನಶೆಟ್ಟಿ ಅವರ ನೆಲಮಹಡಿಗೆ ನೀರು ನುಗ್ಗಿ ಅಂದಾಜು 1 ಕೋಟಿ ಮೌಲ್ಯದ ರಾಸಾಯನಿಕ ಗೊಬ್ಬರ ಮತ್ತು ಔಷಧಿ ನೀರು ಪಾಲಾಗಿದೆ. ಸುತ್ತ ಮುತ್ತಲ ಕೃಷಿ ಜಮೀನುಗಳು ಹಾಗೂ ಮನೆಗಳು ಹಾನಿಗೊಳಗಾಗಿದ್ದು, ಸ್ಥಳೀಯ ಆಡಳಿತ ಸಂತ್ರಸ್ತರಿಗೆ ನೆರವು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕ್ರಮಕ್ಕೆ ಮುಂದಾಗಿದೆ.





