ಮೋದಿ ಮತ್ತವರ ಬಳಗವಾಗಿರುವ ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಬಾರಿ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಸವನ ಬಾಗೇವಾಡಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
“ಬಿಜೆಪಿಯವರು ಸುಳ್ಳಿನ ಮೇಲೆ ಸಾಮ್ರಾಜ್ಯ ಕಟ್ಟುತ್ತಾರೆ. ಇಲ್ಲದ್ದನ್ನು ಅಚ್ಚುಕಟ್ಟಾಗಿ ಸೃಷ್ಟಿಸುತ್ತಾರೆ. ಭ್ರಮೆಗಳನ್ನು ಬಿತ್ತಿ ಮುಗ್ಧ ಜನರ ಮತ ಕೇಳುತ್ತಾರೆ. ಇದೆಲ್ಲದರಿಂದ ಬೇಸತ್ತು ತಾವು ಬಿಜೆಪಿ ತೊರೆಯಬೇಕಾಯಿತು” ಎಂದು ಹೇಳಿದರು.
“ಕಾಂಗ್ರೆಸ್ ಪಕ್ಷ ಮೊದಲಿಂದ ದೇಶ ಪ್ರೇಮ ಮೆರೆಯುತ್ತಾ ಬಂದಿದೆ. ಈ ದೇಶವನ್ನು ಕಟ್ಟಿದೆ. ರಾಜ್ಯದ ಸಿದ್ದರಾಮಯ್ಯರ ಸರ್ಕಾರ ಗ್ಯಾರಂಟಿಗಳ ಮೂಲಕ ಜನಮನವನ್ನು ಗೆದ್ದಿದೆ. ಬಡವರ ನಿತ್ಯ ಜೀವನಕ್ಕೆ ಸಹಾಯವಾಗಲಿ ಎಂದು ಭಾಗ್ಯಗಳನ್ನು ಕೊಟ್ಟಿದೆ. ಕೆಂದ್ರ ಸರ್ಕಾರದ ಕೆಟ್ಟ ಆಡಳಿತದಿಂದ ಬೆಲೆ ಏರಿಕೆ, ಹಣದುಬ್ಬರ, ಜಿಎಸ್ಟಿ, ನೋಟ್ ಬಂದಿಯಿಂದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿತ್ತು. ಇದರಿಂದ ಸಾಮಾನ್ಯ ಜನ ತತ್ತರಿಸಿದ್ದರು. ಅವರಿಗೆಲ್ಲ ಗ್ಯಾರಂಟಿಗಳಿಂದ ಉಸಿರಾಡುವಂತಾಗಿದೆ” ಎಂದರು.
“ಜಿಲ್ಲೆಯ ಅಭಿವೃದ್ಧಿಗಾಗಿ ಆಲಗೂರರನ್ನು ಆಯ್ಕೆ ಮಾಡಿದರೆ ಒಳಿತಾಗಲಿದೆ. ದಶಕಗಳ ಕಾಲ ಈ ಲೋಕಸಭೆ ಕ್ಷೇತ್ರ ಏಳಿಗೆಯಿಂದ ವಂಚಿತವಾಗಿದೆ. ಕಾಂಗ್ರೆಸ್ ಇಲ್ಲಿ ಗೆಲ್ಲವುದು ಖಚಿತ. ಆರಿಸಿ ಬಂದ ನಂತರ ನಿಮ್ಮ ಅಗತ್ಯಗಳಿಗೆ ನಮ್ಮ ಅಭ್ಯರ್ಥಿ ಸ್ಪಂದಿಸಲಿದ್ದಾರೆ” ಎಂದು ಭರವಸೆ ನೀಡಿದರು.
ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ ಮಾತನಾಡಿ, “ಆರು ಸಲ ಸಂಸದರಾಗಿದ್ದ ಜಿಗಜಿಣಗಿಯವರಿಂದ ಯಾವ ಕೆಲಸವೂ ಆಗಿಲ್ಲ. ಇವರು ಬೇಕೊ ಆಲಗೂರರು ಬೇಕೊ ನಿವೇ ನಿರ್ಧರಿಸಿ. ಪ್ರಜಾಪ್ರಭುತ್ವದ ಉಳಿವಿಗಾಗಿ ನೀವು ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಸಂಕಷ್ಟದಲ್ಲಿದೆ. ದುರಾಡಳಿತ ಹೆಚ್ಚಿದೆ” ಎಂದು ಆರೋಪಿಸಿದರು.
ಅಭ್ಯರ್ಥಿ ಪ್ರೊ ರಾಜು ಆಲಗೂರ ಮಾತನಾಡಿ, “ಬಿಜೆಪಿ ಹುರಿಯಾಳಾದ ಜಿಗಜಿಣಗಿಯವರು ಹತಾಶರಾಗಿದ್ದಾರೆ. ಸಹನೆ ಕಳೆದುಕೊಂಡು ಏನೇನೊ ಮಾತನಾಡುತ್ತಿದ್ದಾರೆ. ಇದು ಅವರ ಸೋಲಿನ ದಿಕ್ಸೂಚಿಯಾಗಿದೆ. ಮತದಾರರಾಗಿರುವ ನೀವು ನನ್ನನ್ನು ಆಯ್ಕೆ ಮಾಡಿದರೆ ನಿಮ್ಮ ವಿಶ್ವಾಸ ಉಳಿಸಿಕೊಳ್ಳುವೆ” ಎಂದು ಭರವಸೆ ನೀಡಿದರು.
ಮಾಜಿ ಜಿಪಂ ಸದಸ್ಯ ಕಲ್ಲು ದೇಸಾಯಿ ಪ್ರಸ್ತಾವಿಕ ಮಾತನಾಡಿ, “ಕೊಲ್ಹಾರದ ಈ ಚುನಾವಣೆ ಮಹತ್ವದ್ದಾಗಿದೆ. ಈ ಚುನಾವಣೆಯಲ್ಲಿ ಬದಲಾವಣೆ ನಿಶ್ಚಿತ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಜಯಶಾಲಿ ಆಗುವುದರ ಮೂಲಕ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ. ಜತೆಗೆ ಇದು ದೇಶದ ಭವಿಷ್ಯ ಬರೆಯುವ ಚುನಾವಣೆಯಾಗಿದೆ. ಬಸವನ ನಾಡಿನವರಾದ ನಾವು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕೆ ಋಣಿಯಾಗಿ ಕಾಂಗ್ರೆಸ್ಗೆ ಮತ ಹಾಕೋಣ” ಎಂದು ಹೇಳಿದರು.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, “ಆಲಗೂರರ ಗೆಲುವು ನೂರಕ್ಕೆ ನೂರು ಸಾಧ್ಯ. ಮಾತು ಕೊಟ್ಟಂತೆ ರಾಜ್ಯ ಸರ್ಕಾರ ನಡೆದುಕೊಂಡಿದ್ದಕ್ಕೆ ಜನರ ಪ್ರೀತಿ ಗಳಿಸಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ: ಮಾಜಿ ಸಚಿವ ವಿನಯಕುಮಾರ ಸೊರಕೆ
ಮುಖಂಡರುಗಳಾದ ಶಿವನಗೌಡ ಗುಜಗೊಂಡ, ಸಿ ಎಸ್ ಗಿಡ್ಡಪ್ಪಗೋಳ, ಬಿ ಯು ಗಿಡ್ಡಪ್ಪಗೋಳ, ಎಸ್ ಬಿ ಪತಂಗಿ, ಆರ್ ಬಿ ಪಕಾಲಿ, ಉಸ್ಮಾನ ಪಟೇಲ್, ವಿಜಯ ಮಹಾಂತೇಶ ಗಿಡ್ಡಪ್ಪಗೋಳ, ಎಂ ಆರ್ ಕಲಾದಗಿ, ಶ್ರೀಶೈಲ ಗೌಡರ, ಡಾ ಮೇತ್ರಿ ಸೇರಿದಂತೆ ಅನೇಕರಿದ್ದರು.





