ವಿಜಯಪುರ ಜಿಲ್ಲೆಯು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿದ್ದು, ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಶ್ರಮಪಟ್ಟು ಅಭ್ಯಾಸ ಮಾಡಬೇಕೆಂದರೆ, ಅವರಿಗೆ ವೈದ್ಯಕೀಯ ಶಿಕ್ಷಣ ಪಡೆಯಲು, ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ಇದೆ. ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಕೊಟ್ಟು ಶಿಕ್ಷಣ ಪಡೆಯುವುದಂತೂ ಬಡ ವಿದ್ಯಾರ್ಥಿಗಳು, ರೈತ, ಕೂಲಿ-ಕಾರ್ಮಿಕರ ಮಕ್ಕಳಿಗೆ ಸಾಧ್ಯವಾಗುವುದಿಲ್ಲ. ಈ ಕಾರಣ ಸರ್ಕಾರವು ವಿಶೇಷ ಮುತುವರ್ಜಿವಹಿಸಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನೂ ಸ್ಥಾಪನೆ ಮಾಡಬೇಕೆಂದು ಹಿರಿಯ ಪತ್ರಕರ್ತ ಅನಿಲ ಹೊಸಮನಿ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯನ್ನು ಕೈ ಬಿಟ್ಟು, ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಎ ಐ ಡಿ ಎಸ್ ಒ ನಗರದ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.
ಅಲ್ ಅಮೀನ್ ಮೆಡಿಕಲ್ ಕಾಲೇಜಿನ ಅಧೀಕ್ಷಕ ಡಾ. ಜಿಲಾನಿ ಅವಟಿ ಮಾತನಾಡಿ, “ಖಾಸಗಿ ಆಸ್ಪತ್ರೆಯಲ್ಲಿ ಕೆಲವು ಸಣ್ಣ ಚಿಕಿತ್ಸೆಗೂ 30 ರಿಂದ 40 ಸಾವಿರ ಖರ್ಚಾಗುತ್ತದೆ. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲವು ಉಚಿತವಾಗಿ ಸಿಗುತ್ತದೆ. ಬಡವರಿಗೆ ಆರೋಗ್ಯ ಸೌಲಭ್ಯ ಖಾತ್ರಿಯಾಗುವುದರ ಜೊತೆಗೆ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗಬೇಕಾದರೆ, ಸರ್ಕಾರವು ವೈದ್ಯಕೀಯ ಕಾಲೇಜಿನ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಪಿಪಿಪಿ ಮಾದರಿಯನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.
ಇದನ್ನೂ ಓದಿ: ವಿಜಯಪುರ | ರಸ್ತೆ ಅಗಲೀಕರಣ ವಿರೋಧಿಸಿ ಪ್ರತಿಭಟನೆ; ಆಪ್ ಬೆಂಬಲ
ಎಐಡಿಎಸ್ಒ ರಾಜ್ಯ ಸೆಕ್ರೆಟರಿಯೆಟ್ ಸದಸ್ಯ ಕಂಬಳಿ ಮಂಜುನಾಥ ಮಾತನಾಡಿ,”ಕಳೆದ 20 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ, ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಹೋರಾಟವನ್ನು ಬಳಸಲಾಗುತ್ತಿದೆ. ರಾಜ್ಯದ 7 ಕೋಟಿ ಜನ ಸಂಖ್ಯೆಗೆ, ಕೇವಲ 1,14,000 ಡಾಕ್ಟರ್ ಗಳ ಲಭ್ಯತೆ ಇರುವುದು ರಾಜ್ಯದ ಆರೋಗ್ಯ ಕ್ಷೇತ್ರದ ಶೋಚನೀಯ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ. ಇಂತಹ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣವನ್ನು ಖಾಸಗಿ ಸಹಭಾಗಿತ್ವದೊಂದಿಗೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆಯು ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಿ, ಬಡ-ಪ್ರತಿಭಾವಂತ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ವಂಚಿತರನ್ನಾಗಿಸುತ್ತದೆ. ಈ ಹಿನ್ನೆಯಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನು ತೆರೆಯದೇ, ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು, ಈ ಮೂಲಕ ಬಡ-ಪ್ರತಿಭಾವಂತರ ಪರವಾಗಿ ಕಾರ್ಯಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದರು.
ರೈತ ಮುಖಂಡರಾದ ಅರವಿಂದ ಕುಲಕರ್ಣಿ, ಭರತ ಕುಮಾರ ಹೆಚ್ ಟಿ ಮಾತನಾಡಿದರು.
ಈ ವೇಳೆ ಎಐಡಿಎಸ್ಒ ಸಂಘಟನಾಕಾರರಾದ ಗೋವಿಂದ ಯಳವಾರ, ಕಾವೇರಿ ರಜಪೂತ್, ಹಾಗೂ ವಿವಿಧ ಕಾಲೇಜಿನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದರು.





