ಕರ್ನಾಟಕ ಸರ್ಕಾರವು ರಾಜ್ಯದಲ್ಲಿ 700 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ, ಮ್ಯಾಗ್ನೆಟ್ ಶಾಲೆಯ 3 ರಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳಲ್ಲಿ ಸಮ್ಮಿಳಿತಗೊಳಿಸಲಾಗುತ್ತದೆ ಎಂದು AIDSO ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಕಳವಳ ವ್ಯಕ್ತಪಡಿಸಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದೊಂದಿಗೆ ʼಸರ್ಕಾರಿ ಶಾಲೆʼಗಳನ್ನು ಮುಚ್ಚುವುದರ ವಿರುದ್ಧ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.
“ಈಗಾಗಲೇ ಈ ಮಾದರಿಯಲ್ಲಿ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಸರ್ಕಾರಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿ ದೊಡ್ಡಿ ಶಾಲೆ, 31 ವಿದ್ಯಾರ್ಥಿಗಳಿರುವ ಅಮ್ಮಳ್ಳಿ ದೊಡ್ಡಿ ಶಾಲೆ, 100 ವಿದ್ಯಾರ್ಥಿಗಳಿರುವ ಸಂತೆಮೊಗೇನಹಳ್ಳಿ ಶಾಲೆ, 20 ವಿದ್ಯಾರ್ಥಿಗಳಿರುವ ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ ಕೆಪಿಎಸ್ಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ” ಎಂದರು.
“ಈ ಊರುಗಳ ಜನರಲ್ಲಿ ಈಗಾಗಲೇ ಆತಂಕ ಸೃಷ್ಟಿಯಾಗಿದೆ ಮತ್ತು ತಮ್ಮ ಊರಿನ ಶಾಲೆಗಳು ಉಳಿಯಬೇಕು ಹಾಗೂ ಅವುಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ. ಇದೇ ರೀತಿ 700 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ ಸಾವಿರಾರು ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯದ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ. ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ 5,900 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸುವ ಉದ್ದೇಶವನ್ನು ರಾಜ್ಯ ಸರ್ಕಾರವು ಹೊಂದಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹಣವಾಳ ಪಿಡಿಒ ಅಮಾನತು
“ಹೀಗಾದಲ್ಲಿ 40,000 ಸರ್ಕಾರಿ ಶಾಲೆಗಳು ಮುಚ್ಚಿಹೋಗುವ ಅಪಾಯಕ್ಕೆ ತುತ್ತಾಗುತ್ತವೆ. ಅಲ್ಲದೆ ಹಳ್ಳಿಗಳಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯಡಿಯ ಶಾಲೆಗಳನ್ನು ಮುಚ್ಚುವುದರಿಂದ ಕಾಲಿಕಾರರು ಮತ್ತು ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಕಾಲ ದೂರದಲ್ಲಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.
ಅಕ್ಷತಾ ವಾಗ್ಮಡಿ, ಸುಖನ್ಯಾ ಹೂಗಾರ, ಸಂಪೂರ್ಣ ಮಾಯಾಚಾರಿ, ರಾಧಿಕಾ ಕೆಂಗಾರ, ಸ್ವಪ್ನಾ ರಾಠೋಡ, ಸಾಕ್ಷಿ ಮಾದರ, ಲಕ್ಷ್ಮಿ ದೊಡ್ಡಮನಿ, ಅಶ್ವಿನಿ ಹಾದಿಮನಿ, ಅಕ್ಷತಾ ಗೌಡಪ್ಪಗೋಳ, ಭಾಗ್ಯಲಕ್ಷ್ಮಿ ಪೂಜಾರಿ ಹಾಗೂ ಇನ್ನಿತರ ವಿದ್ಯಾರ್ಥಿಗಳು ಇದ್ದರು.





