ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನವರ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ. ಏಕೆಂದರೆ ಪ್ರಬಲ ಆಂಗ್ಲರ ವಿರುದ್ಧ ಹೋರಾಟ ನಡೆಸಿ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಕೀರ್ತಿ ಅವರದು ಎಂದು ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ಯವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮಾಜಿ ಜಯಂತಿ ಹಾಗೂ ವಿಜಯೋತ್ಸವದ ವಿಶೇಷ ಉಪನ್ಯಾಸ ಸಮಾರಂಭದಲ್ಲಿ ಮಾತನಾಡಿದರು.
“ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಮಾನವೀಯತೆಗೆ ಹೆಸರಾದ ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕವಾಗಿದೆ. ಝಾನ್ಸಿಯ ರಾಣಿ ಲಕ್ಷ್ಮೀಬಾಯಿಯವರ ಹೋರಾಟಕ್ಕಿಂತ 33 ವರ್ಷ ಮೊದಲು ಕಿತ್ತೂರಿನ ರಾಣಿ ಚನ್ನಮ್ಮ ಅವರು ಬ್ರಿಟಿಷ್ ಅಧಿಕಾರಿಗಳಿಗೆ ಮೊದಲ ಸೋಲನ್ನು ನೀಡಿದರು. ಕಿತ್ತೂರಿನ ಸರದಾರ್ ಗುರುಸಿದ್ಧಪ್ಪ ಅಮಟೂರು, ಬಾಳಪ್ಪ ಬಿಚ್ಚುಗತ್ತಿ, ಚನ್ನಬಸಪ್ಪ, ಸಂಗೋಳ್ಳಿ ರಾಯಣ್ಣ, ವಡ್ಡರ ಯಲ್ಲಣ್ಣನಂತಹ ವೀರರ ಸಂಘಟಿತ ಹೋರಾಟ ಇಂದಿಗೂ ಭಾರತದ ಇತಿಹಾಸದಲ್ಲಿ ಅಜರಾಮರವಾಗಿದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶಟ್ಟಿ ಮಾತನಾಡಿ, “ಮೌಲ್ಯಾಧಾರಿತ ಬದುಕಿನಿಂದ ವ್ಯಕ್ತಿತ್ವ ರೂಪಿಸಿಕೊಳ್ಳುವ ತುರ್ತು ಅಗತ್ಯ ನಮ್ಮ ಮುಂದೆ ಇದೆ. ಇಂದು ‘ರೀಲ್ಸ್ ಲೈಫ್’ಗಿಂತ ‘ರಿಯಲ್ ಲೈಫ್’ ಬಗ್ಗೆ ಎಚ್ಚರಿಕೆಯಿಂದ ಬದುಕುವುದು ಮುಖ್ಯ. ಕಿತ್ತೂರು ರಾಣಿ ಚನ್ನಮ್ಮನಂತಹ ಸಬಲೀಕೃತ ರಾಣಿಯ ಜೀವನಾದರ್ಶಗಳು ವಿದ್ಯಾರ್ಥಿನಿಯರಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಕರ್ನಾಟಕ ಎಂದರೆ ಅದು ಕಿತ್ತೂರು ಚನ್ನಮ್ಮ ಅವರ ನೆನಪನ್ನು ಜೀವಂತವಾಗಿಟ್ಟಿದೆ. ಅವರ ಬದುಕು ನಮಗೆ ಚೈತನ್ಯ ತುಂಬುತ್ತದೆ” ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಉಪನ್ಯಾಸಕ್ಕೆ ಸಂಬಂಧಿಸಿದಂತೆ ಹತ್ತು ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿನಿಯರಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಸಂಯೋಜಕ ಬಸವ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ರಾಜಕುಮಾರ ಮಾಲಿಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, “ಚನ್ನಮ್ಮ ಅವರ ಜೀವನ ಇತಿಹಾಸ ಹೆಣ್ಣುಮಕ್ಕಳಿಗೆ ಸ್ವಾಭಿಮಾನಿ ಬದುಕನ್ನು ರೂಪಿಸಿಕೊಳ್ಳಲು ಪ್ರೇರಣೆಯಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಎಡಿಸಿ ಸೈಯಿದಾ ಆಯಿಷಾ.
ಕಾರ್ಯಕ್ರಮದಲ್ಲಿ ಪ್ರೊ. ಬಿ ಎಲ್ ಲಕ್ಕಣ್ಣನವರ, ವಿವಿಧ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸ್ನಾತಕ ದೈಹಿಕ ಶಿಕ್ಷಣ ವಿಭಾಗದ ಅಶ್ವಿನಿ ಮತ್ತು ಅನ್ನಪೂರ್ಣ ಪ್ರಾರ್ಥನೆ ಸಲ್ಲಿಸಿದರು. ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ರಾಜೇಶ್ವರಿ ನಿರೂಪಣೆ ಮಾಡಿ, ಅಶ್ವಿನಿ ವಂದಿಸಿದರು.





