ಮೌಲಾನಾ ಆಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಎಂಜಿವಿಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಆಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಮೌಲಾನಾ ಆಜಾದ್ ಅವರ ಜನ್ಮದಿನದ ಅಂಗವಾಗಿ ʼರಾಷ್ಟ್ರೀಯ ಶಿಕ್ಷಣ ದಿನಾಚರಣೆʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಮಹಿಳೆಯರು ಶಿಕ್ಷಣ ಪಡೆಯುವುದರ ಮೂಲಕ ಸಮಾಜದ ಪ್ರಗತಿಗೆ ಪೂರಕವಾಗಬೇಕು. ಶಿಕ್ಷಣವು ಕೇವಲ ಜ್ಞಾನವಲ್ಲ, ಅದು ಸಾಮಾಜಿಕ ಬದಲಾವಣೆಗೆ ದಾರಿ ತೋರಿಸುವ ಅತ್ಯಂತ ಮಹತ್ವದ ಅಂಶವಾಗಿದೆ” ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ವಿದ್ಯಾರ್ಥಿನಿಯರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಮೌಲಾನಾ ಆಜಾದ್ ಅವರ ಜೀವನಾಧಾರಿತ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿನಿಯರು ಇಂತಹ ಚಟುವಟಿಕೆಗಳ ಮೂಲಕ ಹೆಚ್ಚಿನ ಜ್ಞಾನವನ್ನು ಪಡೆದುಕೊಂಡು, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು” ಎಂದು ಹೇಳಿದರು.
ಇದನ್ನೂ ಓದಿ: ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಹಾಗೂ ಮಹಿಳಾ ವಿವಿಯ ವಿವಿಧ ವಿಭಾಗಗಳ ವಿಧ್ಯಾರ್ಥಿನಿಯರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಉಪಸ್ಥಿತರಿದ್ದರು.





