ಯಾರೂ ಭಯಪಡವ ಅವಶ್ಯಕತೆ ಇಲ್ಲ. ಸರ್ಕಾರ ಹಾಗೂ ವಿಜಯಪುರ ಜಿಲ್ಲಾಡಳಿತ ಸಂತ್ರಸ್ತರೊಂದಿಗಿವೆ. ಪರಿಹಾರಕ್ಕೆ ತುತ್ತಾಗಿರುವ ಪ್ರತಿಯೊಬ್ಬರಿಗೂ ಪರಿಹಾರ ಕಲ್ಪಿಸಲಾಗುವುದು. ಪ್ರವಾಹದಿಂದ ಹಾನಿಗೊಳಗಾದ ಬೆಳೆನಾಶ, ಮನೆ ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಬಿ ಪಾಟೀಲ ತಿಳಿಸಿದರು.
ಪ್ರವಾಹ ಪೀಡಿತ ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರ್ಸಾಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ಅಲ್ಲಿನ ಸಂತ್ರಸ್ತರೊಂದಿಗೆ ಮಾತನಾಡಿ, “ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಯಾವುದೇ ಜನ ಜಾನುವಾರುಗಳ ಪ್ರಾಣ ಹಾನಿ ಆಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಹೇಳಿದರು.
“ಉಜನಿ ಡ್ಯಾಮ್ ನಿಂದ ಸೀನಾ ನದಿಯ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡುವುದರಿಂದ ಸ್ವಾಭಾವಿಕವಾಗಿ ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕಿನ ವಿವಿಧ ಭಾಗದಲ್ಲಿ ತೀವ್ರವಾದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುಮಸಿಗಿಯ ನೂರು ಮನೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದ್ದು, ಈ ಕುಟುಂಬಗಳಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಿ, ಊಟೋಪಚಾರ, ಔಷಧಿ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಕುಟುಂಬಗಳಿಗೆ ಶಾಶ್ವತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಅನುಮತಿ ಪಡೆದು, ಬೇರೆ ಜಾಗವನ್ನು ನೇರವಾಗಿ ಖರೀದಿಸಿ ಈ ಕುಟುಂಬಗಳಿಗೆ ನೀಡಿ ಸ್ಥಳಾಂತರ ಮಾಡಲು ಕ್ರಮ ವಹಿಸಲಾಗುವುದು. ಜನರ ನೋವುಗಳಿಗೆ ಸ್ಪಂದಿಸಲಾಗುವುದು. ನಾನು ಕೂಡ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರನ್ನು ಈ ಕುರಿತು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ಹೇಳಿದರು.
ಪ್ರವಾಹ ಪರಿಸ್ಥಿತಿಯಿಂದ ಈ ಭಾಗದ ಹತ್ತಿ ಈರುಳ್ಳಿ ತೊಗರಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಈ ಭಾಗದಲ್ಲಿ ಕಬ್ಬು ಬೆಳೆಯ ಕೂಡ ಶೇ.50 ರಷ್ಟು ನಾಶವಾಗಿದ್ದು, ಕ್ಷೇತ್ರದ ಶಾಸಕರಾದಿಯಾಗಿ, ಜಿಲ್ಲಾಡಳಿತ ಜನರ ಕಷ್ಟ ನೋವುಗಳಿಗೆ ಸ್ಪಂದಿಸಿ, ಕಾಳಜಿಪುರಕವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಹಲಮೇಲ ತಾಲೂಕಿನ ದೇವರನಾವಧಿಗೆ ಗ್ರಾಮದ ರೈತ ಬಸಪ್ಪ ನಿಂಗಪ್ಪ ಪೂಜಾರಿ ಅವರ ಜಮೀನಿನಲ್ಲಿ ಈರುಳ್ಳಿ ಬೆಳೆ ಹಾನಿ ವೀಕ್ಷಣೆ, ಜಿಲ್ಲೆಯ ಆಲಮೇಲ ತಾಲೂಕಿನ ದೇವರನ ಅವರಿಗೆ ಶರಣಪ್ಪ ಎರಗಲಾ ಅವರ ಕಬ್ಬು ಹಾನಿ ಹಾಗೂ ದೇವನಗಾವ ಗ್ರಾಮದ ಬಳಿ ಹೊಲದಲ್ಲಿ ನಿಂತಿರುವ ನೀರನ್ನು ಸಚಿವರು ವೀಕ್ಷಣೆ ಮಾಡಿದರು.
ಇದನ್ನೂ ಓದಿ: ಮವಿಜಯಪುರ | ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರೀಯ ಪ್ರಶಸ್ತಿ
ದೇವಣಗಾವ ಗ್ರಾಮದ ಬಳಿ ಸೇತುವೆಗೆ ಭೇಟಿ ನೀಡಿ ವೆಚ್ಚಸಿದ ಸಚಿವರು, ದೇವಣಗಾಂವ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅಶೋಕ ಮನಗೂಳಿ ಜಿಲ್ಲಾಧಿಕಾರಿ ಆನಂದ ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣ ಅಧಿಕಾರಿ ರಿಷಿ ಆನಂದ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಲಕ್ಷ್ಮಣ ನಿಮ್ಮಬರಿಗೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.





