ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಆಧಾರದ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡುತ್ತಿದೆ. ಅದೇ ರೀತಿಯಾಗಿ ರಾಜ್ಯ ಬಿಜೆಪಿಯವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಾಗೂ ರಾಜ್ಯದ ಅನೇಕ ಕಡೆಗಳಲ್ಲಿ ಮಳೆ ಹೆಚ್ಚಾಗಿದೆ. ಅದರಲ್ಲೂ ಮಹಾರಾಷ್ಟ್ರದ ಭೀಮಾ, ಸೀನಾ ನಂದಿಯಿಂದ ಹೆಚ್ಚಿನ ಪ್ರವಾಹ ಬಂದಿದೆ. ಸೀನಾ ನದಿಯಲ್ಲಿ ಹಿಂದೆಂದೂ ಇಷ್ಟೊಂದು ಪ್ರವಾಹ ಇರಲಿಲ್ಲ. ಈ ಬಾರಿ 3 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿದೆ. ಪರಿಣಾಮ ವಿಜಯಪುರ, ಯಾದಗಿರಿ ಸೇರಿ ಇತರ ಜಿಲ್ಲೆಗಳಲ್ಲಿ ಬೆಳೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸಾಕಷ್ಟು ಹಾನಿ ಸಂಭವಿಸಿದೆ. ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದಾಗಿ ಅಂದಾಜು 10 ಲಕ್ಷ ಹೆ. ಬೆಳೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ 2.72 ಲಕ್ಷ ಹೆ. ಬೆಳೆ ಹಾನಿ ಉಂಟಾಗಿದೆ. ಅದರಲ್ಲೂ ಇಂಡಿ ಇಂಡಿ ತಾಲೂಕಿನಲ್ಲಿ ಹೆಚ್ಚಿನ ಬೆಳೆ ಹಾನಿಯಾಗಿದೆ. ಚಡಚಣ, ಆಲಮೇಲ ಭಾಗದಲ್ಲೊ ಅಧಿಕ ನಷ್ಟವಾಗಿದೆ. ಇನ್ನೂ ಮಳೆಯ ಮುನ್ಸೂಚನೆ ಇದೆ. ಈ ಬಾರಿಯ ಪ್ರವಾಹದಿಂದ ರೈತರ ಆತ್ಮಸ್ಥರ್ಯವೇ ಕುಗ್ಗುವಂತಾಗಿದೆ” ಎಂದು ತಿಳಿಸಿದರು.
ಇದನ್ನೂ ಓದಿ: ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ
“ರಾಜ್ಯ ಸರ್ಕಾರ ಈಗಾಗಲೇ ಸಂತ್ರಸ್ತರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಭೀಮಾ ನದಿ, ಸೀನಾ ನದಿಯ ಪ್ರವಾಹ ಇನ್ನೂ ತಗ್ಗಿರಲಿಲ್ಲಾ. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮೂಲಕ ಪರಸ್ಥಿತಿ ಅವಲೋಕನ ಮಾಡಿದ್ದಾರೆ. ಕಲಬುರಗಿಯಲ್ಲಿ ವಿಜಯಪುರ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ, ತಕ್ಷಣವೇ ಪರಿಹಾರವನ್ನು ಘೋಷಿಸುವ ಮೂಲಕ ಪ್ರಾಮಾಣಿಕತೆ ಜತೆಗೆ ಬದ್ಧತೆ ಮೆರೆದಿದ್ದಾರೆ” ಎಂದರು.
ಬಿಜೆಪಿ ನಾಯಕರು ಪ್ರವಾಹ ಪರಿಸ್ಥಿತಿ ವೀಕ್ಷೆಣೆ ಮಾಡಿದ್ದನ್ನು ಸ್ವಾಗತಿಸುತ್ತೇವೆ. ಈ ಸಂಗತಿಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಪರಿಹಾರವನ್ನು ಬಿಡುಗಡೆ ಮಾಡಿಸುವ ಕೆಲಸ ಮಾಡಲಿ. ಇಲ್ಲಿ ರಾಜ್ಯ ಸರ್ಕಾರ ಕಾಂಗ್ರೆಸ್ ಇದೆ ಎಂಬ ಕಾರಣಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸಬಾರದು. ಈ ಹಿಂದೆ ಪ್ರವಾಹ ಸಂದರ್ಭದಲ್ಲಿ ಪ್ರಧಾನಿಯಾಗಿದ್ದ ಡಾ. ಮನಮೋಹನಸಿಂಗ್ ಬಂದು ಪರಿಶೀಲನೆ ಮಾಡಿದ್ದರು. ಅದೆ ರೀತಿಯಾಗಿ ಈಗಿನ ಕೇಂದ್ರ ಸರ್ಕಾರವೂ ಸಹಾಯಕ್ಕೆ ಬರಲಿ ಎಂದು ಆಗ್ರಹಿಸಿದರು.





