ಮಹಾತ್ಮ ಗಾಂಧೀಜಿ ಜೀವನ ಆಧಾರಿತ ಪುಸ್ತಕಗಳನ್ನು ಪಟ್ಟಿ ಮಾಡಿ ಖರೀದಿಸಿ ಗಾಂಧಿ ಭವನ ಗ್ರಂಥಾಲಯದಲ್ಲಿ ಇಡುವಂತೆ ಕ್ರಮ ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ನಗರದ ಗಾಂಧಿ ಭವನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ತಾಣಗಳ ಪಟ್ಟಿಯನ್ನು ತಯಾರಿಸಿದ್ದು, ಅದರೊಂದಿಗೆ ಗಾಂಧಿ ಭವನವನ್ನೂ ಸೇರಿಸಿ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರು ಗಾಂಧಿ ಭವನ ವೀಕ್ಷಣೆಗೆ ಬರುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
“ಗಾಂಧಿ ಭವನವು ಗಾಂಧೀಜಿಯವರ ತತ್ವಗಳ ಪ್ರಚಾರ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ವಹಿಸಬೇಕು” ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
“ಗಾಂಧಿ ಭವನಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧಿಯವರ ಜೀವನ ಆಧಾರಿತ ಕಿರುಚಿತ್ರಗಳನ್ನು ಪ್ರದರ್ಶಿಸುವುದರಿಂದ ಮಕ್ಕಳಲ್ಲಿ ಗಾಂಧೀಜಿಯವರ ಕುರಿತು ಅರಿವು ಮೂಡಿದಂತಾಗುತ್ತದೆ” ಎಂದು ಸಭೆಗೆ ತಿಳಿಸಿದರು.
ಗಾಂಧಿ ಭವನದಲ್ಲಿ ಸದಾಭಿರುಚಿ ಬಿಂಬಿಸುವಂತಹ ಸಂಘ-ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಸ್ಥರಿಂದ ಅನುಮತಿ ಪಡೆದು ಅವರ ಇಲಾಖೆ ಪತ್ರಗಳ ಮೂಲಕ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಗಾಂಧೀಜಿಯವರ ವಿಚಾರಧಾರೆಗಳನ್ನು ಅರಿತುಕೊಳ್ಳಲು ಶಿಕ್ಷಣ ಇಲಾಖೆಯ ಸಮನ್ವಯ ಸಾಧಿಸಿ ಆಗಸ್ಟ್ ಫೌಂಡೇಶನ್ ಸಹಯೋಗದೊಂದಿಗೆ ಮಕ್ಕಳಿಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸುದ್ದಿ ಓದಿದ್ದೀರಾ? ಗಣರಾಜ್ಯೋತ್ಸವ | ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
“ಭವನದ ಸುರಕ್ಷತೆ ದೃಷ್ಟಿಯಿಂದ ಸುತ್ತಲೂ ಎತ್ತರದ ಗೋಡೆಯನ್ನು ನಿರ್ಮಿಸುವುದರೊಂದಿಗೆ ತಂತಿಬೇಲಿ ಅಳವಡಿಸಬೇಕು. ಭವನಕ್ಕೆ ಬೇಕಾಗುವ ಪ್ರೊಜೆಕ್ಟರ್ ಅಳವಡಿಸಬೇಕು, ಸಿಸಿ ಕ್ಯಾಮೆರಾ ಅಳವಡಿಸಬೇಕು, ಶೌಚಾಲಯ ಶುಚಿಗೊಳಿಸಬೇಕು. ಅಲ್ಲದೆ ಸಿಬ್ಬಂದಿಯ ಕೊರತೆ ಇದ್ದರೆ ಕೊಡಲೇ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.





