ವಿಜಯಪುರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಬಂಧಿತರಾಗಿದ್ದ ಆರು ಮಂದಿ ಹೋರಾಟಗಾರರಿಗೆ ಜಾಮೀನು ಸಿಕ್ಕಿದ್ದು, ಇಂದು ಸಂಜೆ ಬಿಡುಗಡೆಯಾಗುತ್ತಿದ್ದಂತೆ ಮೆರವಣಿಗೆ ಮೂಲಕ ವಿಜಯೋತ್ಸವ ಆಚರಿಸಲಾಗುತ್ತಿದೆ.
ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ ಹೋರಾಟದಲ್ಲಿ ಬಂಧಿತರಾಗಿದ್ದ ಆರು ಮಂದಿ ಹೋರಾಟಗಾರರಿಗೆ ಮಂಗಳವಾರ ವಿಜಯಪುರ ಜಿಲ್ಲಾ ಸೇಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
“ಜಾಮೀನು ನೀಡಿದ ಆದೇಶ ಪ್ರತಿ ಮಂಗಳವಾರ ಲಭಿಸದ ಕಾರಣ ಬಿಡುಗಡೆ ಸಾಧ್ಯವಾಗಲಿಲ್ಲ. ಹಾಗಾಗಿ ಜನವರಿ 14ರ ಇಂದು ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ದರ್ಗಾ ಜೈಲಿನಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ಮಾಡಿ, ವಿಜಯೋತ್ಸವ ನಡೆಸಲಾಗುತ್ತಿದೆ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ ಸದಸ್ಯ ಎಚ್ ಟಿ ಭರತ್ ಕುಮಾರ್” ತಿಳಿಸಿದ್ದಾರೆ.
ಘಟನೆ ಹಿನ್ನೆಲೆ
ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ(ಪಿಪಿಪಿ) ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಜನವರಿ 1ರಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ನಡೆದ ತಳ್ಳಾಟದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಬಿ ಭಗವಾನರೆಡ್ಡಿ, ಭೋಗೇಶ ಸೊಲ್ಲಾಪುರ, ಸಿದ್ದರಾಮಯ್ಯ ಹಳ್ಳೂರ ಹಾಗೂ ಹುಣಶ್ಯಾಳದ ಸಂಗನಬಸವ ಸ್ವಾಮೀಜಿಯವರು ಬಂಧಿತರಾಗಿ ಜೈಲು ಪಾಲಾಗಿದ್ದರು.
ಈ ಸುದ್ದಿ ಓದಿದ್ದೀರಾ? ವಿಜಯಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಹೋರಾಟ: ದಮನದ ನೆರಳಿನಲ್ಲಿ ನ್ಯಾಯದ ಹುಡುಕಾಟ
ಇದೇ ಪ್ರಕರಣದಲ್ಲಿ ಇನ್ನೂ 21 ಮಂದಿ ಹೋರಾಟಗಾರರ ವಿರುದ್ಧ ಕೊಲೆಯತ್ನ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ ಜಿಲ್ಲಾ ಪೊಲೀಸ್ ಹಾಗೂ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ, ಟೀಕೆ ವ್ಯಕ್ತವಾಗಿತ್ತು.
ಹೋರಾಟದ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಿಜಯಪುರಕ್ಕೆ ಜನವರಿ 9ರಂದು ಭೇಟಿ ನೀಡಿ, ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮತ್ತು ಪಿಪಿಪಿ ಕೈಬಿಟ್ಟಿರುವುದಾಗಿ ಘೋಷಣೆ ಮಾಡಿದ್ದರು.





