ಗ್ರಾಮೀಣ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ (ಎನ್ಆರ್ಎಲ್ಎಂ) ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ್ ಹೇಳಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
“ನಮ್ಮ ದೇಶದಲ್ಲಿ ಶೇ.70 ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು, ಗ್ರಾಮಾಭಿವೃದ್ಧಿ ಅವಶ್ಯಕತೆಯಿದೆ. ಯೋಜನೆಯಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ರಚಿಸಿ, ಅವುಗಳನ್ನು ಸಾಂಸ್ಥಿಕ ಮತ್ತು ಆರ್ಥಿಕವಾಗಿ ಬಲವರ್ಧನೆ ಮಾಡುವುದರ ಜತೆಗೆ ಸಮುದಾಯ ಬಂಡವಾಳ ನಿಧಿ, ಸುತ್ತು ನಿಧಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ತನ್ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಸ್ವ-ಸಹಾಯ ಸಂಘಗಳ ಬಲವರ್ಧನೆಗೆ ಬ್ಯಾಂಕ್ ಖಾತೆ ತೆರೆಯುವುದು ಹಾಗೂ ಅವರಿಗೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ಮಹಿಳೆಯರ ಜೀವನೋಪಾಯಕ್ಕೆ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಕರಿಸಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.
ಇದನ್ನೂ ಓದಿ: ವಿಜಯಪುರ | ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಗೌಡಪ್ಪ ಬಡಿಗೇರ ಮನವಿ
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನವಲ್ ಕಿಶೋರ್ ಸಿಂಗ್, ಬ್ಯಾಂಕ್ ವ್ಯವಸ್ಥಾಪಕರು, ಶಾಖೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಮಟ್ಟದ ಸಿಬ್ಬಂದಿಗಳು, ಲೀಡ್ ಬ್ಯಾಂಕಿನ ಸಿಬ್ಬಂದಿ, ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು





