ವಿಜಯಪುರ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ (ಫೆ.28) ದ್ವಿತೀಯ ಪಿಯುಸಿ-1ರ ಪರೀಕ್ಷೆಗಳು ಆರಂಭಗೊಂಡಿವೆ. ಶನಿವಾರ ಕನ್ನಡ ಹಾಗೂ ಅರೆಬಿಕ್ ವಿಷಯಗಳ ಪರೀಕ್ಷೆ ಶಾಂತಿಯುತವಾಗಿ ಜರುಗಿತು.
ಪರೀಕ್ಷೆಗಳ ಸುಸೂತ್ರ ಹಾಗೂ ಸುಗಮ ನಿರ್ವಹಣೆಗೆ ಕೈಗೊಳ್ಳಲಾದ ವ್ಯವಸ್ಥೆಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ನಗರದ ವಿಬಿ ದರಬಾರ ಕಾಲೇಜು, ಎಸ್.ಎಸ್. ಪದವಿಪೂರ್ವ ಕಾಲೇಜು ಹಾಗೂ ಖೇಡ ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಈ ವೇಳೆ ಅವರು ಪರೀಕ್ಷಾ ಕೊಠಡಿಗಳು, ಭದ್ರತಾ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಒದಗಿಸಲಾದ ಸೌಲಭ್ಯಗಳನ್ನು ಪರಿಶೀಲಿಸಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೇ ಅತ್ಯಂತ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಅಗತ್ಯ ಗಾಳಿ ಬೆಳಕು ಕುಡಿಯುವ ನೀರು ಒದಗಿಸಬೇಕು. ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ. ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ಹಾಗೂ ವೈದ್ಯಕೀಯ ವ್ಯವಸ್ಥೆ ಕಲ್ಪಿಸಿರುವ ಕುರಿತು ಮಾಹಿತಿ ಪಡೆದುಕೊಂಡರು.
ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯ ಮುಕ್ತ ಮತ್ತು ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ
ಇದೇ ವೇಳೆ ಪ್ರಥಮ ಚಿಕಿತ್ಸಾ ವ್ಯವಸ್ಥೆಯ ಕಿಟ್ ಗಳನ್ನು ಪರಿಶೀಲಿಸಿದರು. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಗಾಳಿ ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಇನ್ನುಳಿದಂತೆ ಎಲ್ಲ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಅಭಿರಕ್ಷಕರು. ಸ್ಥಾನಿಕ ಜಾಗೃತ ದಳದವರು ಹಾಗೂ ಮೊಬೈಲ್ ಸ್ವಾಧೀನಾಧಿಕಾರಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅನ್ಯ ಹಾಗೂ ಬಾಹ್ಯ ವ್ಯಕ್ತಿಗಳು ಇಲ್ಲದೇ ಇರುವುದನ್ನೂ ಸಹ ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಆಸನಗಳ ಮಧ್ಯದಲ್ಲಿ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
ಈ ಸಂದರ್ಭ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ.ಹೊಸಮನಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.





