ಇದೇ ಮಾರ್ಚ್ 18ರಿಂದ ಆರಂಭವಾಗುವ SSLC ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ಆಯೋಜನೆ ಮಾಡಬೇಕು ಎಂದು ಪರೀಕ್ಷಾ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ ನೀಡಿದರು.
ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ -1ರ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು ತನ್ಮೂಲಕ ಪರೀಕ್ಷೆಯ ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು. ಬಿ ಇ ಒ, ತಸಿಲ್ದಾರ್ ಅವರು ತಾಲೂಕಿನಲ್ಲಿ ಸಭೆ ನಡೆಸಿ ಅಗತ್ಯ ಸೂಚನೆ ನೀಡಬೇಕು. ಮೈಕ್ರೋ ಪ್ಲಾನಿಂಗ್ ಮಾಡಿಕೊಳ್ಳಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ಆರೋಪ ದೋಷಗಳಾಗಬಾರದು, ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು ಎಂದರು.
ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತ ಎರಡು ನೂರು ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗುವುದು. ತುರ್ತು ಸಂದರ್ಭದಲ್ಲಿ ಪಕ್ಷ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ತಮ್ಮ ಜವಾಬ್ದಾರಿ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಪರೀಕ್ಷೆ ನಿಯಮಗಳನ್ಮಯ ಕಾರ್ಯನಿರ್ವಹಿಸಿ, ತಮ್ಮ ನಿಯೋಜಿತ ಪರೀಕ್ಷಾ ಕೇಂದ್ರಗಳಲ್ಲಿ ಮಾಡಿಕೊಂಡಿರುವ ಪೂರ್ವ ಸಿದ್ಧತಾ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಸೌಲಭ್ಯಗಳಿಲ್ಲ ಎಂಬ ದೂರುಗಳು ಬಾರದಂತೆ ಎಲ್ಲರೂ ಜವಾಬ್ದಾರಿತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಪರೀಕ್ಷೆ ಆರಂಭಗೊಳ್ಳಲಿಕ್ಕೆ ಇನ್ನು ಸಮಯವಿದೆ. ಹಾಗಾಗಿ ಪರೀಕ್ಷೆಗೆ ಮುನ್ನವೇ ಯಾವುದೇ ತಾಂತ್ರಿಕ ಸಮಸ್ಯೆ ಯಾಗದಂತೆ ನೋಡಿಕೊಳ್ಳಬೇಕು. ಕೊಠಡಿಯಲ್ಲಿ ಯಾವುದೇ ವಿದ್ಯುತ್, ಸಿಸಿಟಿವಿ ವ್ಯವಸ್ಥೆ, ಶೌಚಾಲಯ, ಸಾಕಷ್ಟು ಕುಡಿಯುವ ನೀರು ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮನಗೌಡ ಹಟ್ಟಿ ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ 137 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಿ ಕಲ್ಪಿಸಲಾಗುವುದು ಎಂದರು.
ಇದನ್ನೂ ಓದಿ: ವಿಜಯಪುರ | ಅಂಬೇಡ್ಕರ್ ಆದರ್ಶಗಳನ್ನು ಅಳವಡಿಕೊಳ್ಳಿ: ಡಾ. ಔದ್ರಾಮ್
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೀರಯ್ಯ ಸಾಲಿಮಠ ಮಾತನಾಡಿ, ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 42,450 ವಿದ್ಯಾರ್ಥಿಗಳು ಪರೀಕ್ಷೆ ನೊಂದಾಯಿಸಿಕೊಂಡಿದ್ದಾರೆ. 137 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಡಯಟ್ ಪ್ರಾಚಾರ್ಯರಾದ ಉಮಾದೇವಿ ಸೊನ್ನದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆ ಅಧಿಕಾರಿ ರಾಹುಲ್ ಬಾವಿದೊಡ್ಡಿ, ವಿಷಯ ಪರಿವೀಕ್ಷಕ ಶಿವನಂದ ಬ್ಯಾಹಟ್ಟಿ ಇದ್ದರು.





