ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.
ಧರ್ಮಸ್ಥಳದಲ್ಲಿ ಕಳೆದ 20ಕ್ಕೂ, ಹೆಚ್ಚು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು ಎಂದು ಈ ಹಿಂದೆ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿತ್ತು. ಅದಾದ ಬಳಿಕ ಎಸ್ಐಟಿ ರಚನೆಯಾಗಿದೆ.
ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಕೊಂದವರು ಯಾರು? ಆಂದೋಲನ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
“ಎಸ್ಐಟಿ ರಚನೆಯಾಗಬೇಕೆಂಬ ಕೋರಿಕೆಯ ಆಶಯವೂ ಮತ್ತು ಸರ್ಕಾರದ ಆದೇಶವೂ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211 (ಎ), ಬಿಎನ್ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ’ ತನಿಖೆಯನ್ನು ಎಸ್ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ” ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.
“ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಪನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಪನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಎಸ್ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ” ಎಂದು ಮನವಿ ಮಾಡಿದ್ದಾರೆ.
ಇನ್ನು ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರ್ಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಕನ್ನಡ ರಾಜ್ಯೋತ್ಸವ ದಿನದಂದು ನ್ಯಾಯಕ್ಕಾಗಿ ಆಗ್ರಹಿಸಿ ಮಹಿಳಾ ಸಂಘಟನೆಗಳು, ಮಹಿಳಾ ಸಮಾನತೆಯನ್ನು ಬೆಂಬಲಿಸುವ ಸಹೃದಯರು ಒಟ್ಟುಗೂಡಿ ಶನಿವಾರ ಬೆಂಗಳೂರು ನಗರದ ಫ್ರೀಡಂ ಪಾರ್ಕ್ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
“ಎಸ್ಐಟಿ ರಚನೆಗಾಗಿ ಆಗ್ರಹಿಸಿದ ಮಹಿಳಾ ಆಯೋಗದ ಪತ್ರ ಮತ್ತು ಅದನ್ನು ಆಧರಿಸಿ ಎಸ್ಐಟಿ ರಚಿಸಿದ ಸರ್ಕಾರದ ಆದೇಶ, ಎರಡರಲ್ಲೂ ಸ್ಪಷ್ಟವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನೂ ಒಳಗೊಂಡ ಸಮಗ್ರ ತನಿಖೆ ನಡೆಯಬೇಕು ಎಂಬ ಆಶಯವಿದೆ. ಹಾಗಿದ್ದ ಮೇಲೆ, ಅಂತಹ ಎಲ್ಲ ಪ್ರಕರಣಗಳ ತನಿಖೆಯನ್ನೂ ಸಂಪೂರ್ಣಗೊಳಿಸುವ ತನಕ ಸರ್ಕಾರ ಎಸ್ಐಟಿ ತನಿಖೆ ನಿಲ್ಲಿಸಬಾರದು” ಎಂದು ಫ್ರೀಡಂ ಪಾರ್ಕ್ನಲ್ಲಿ ಸೇರಿದ್ದ ಚಿಂತಕಿಯರು, ಬರಹಗಾರ್ತಿಯರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು.





