ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸುವುದು ಸೂಕ್ತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಕ್ಕಾಗಿ 50 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ರೀಲ್ಸ್ಗೆ ಪ್ರೋತ್ಸಾಹಿಸಿ :
ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ:
ಜಿಲ್ಲೆಯ 234 ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವುಳ್ಳ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗಳಿಗೆ ನೀಡುವ ಹೆಚ್ಚಿನ ಶುಲ್ಕದ ಹೊರೆಯನ್ನು ತಪ್ಪಿಸಿದಂತಾಗುತ್ತದೆ. ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ನಗರದಲ್ಲಿ ನಿವೇಶನಗಳನ್ನು ಗುರುತಿಸಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಸಹಾಯವಾಣಿ ಕೇಂದ್ರಕ್ಕೆ ಸಚಿವರ ಕರೆ :
ಸಭೆಯ ಮಧ್ಯೆ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ದೂರವಾಣಿ ಕರೆ ಮಾಡಿ ಅಪರಿಚಿತರಂತೆ ಮಾತನಾಡಿ “ನಾನು ಶಿರಾದಿಂದ ಮಾತನಾಡುತ್ತಿದ್ದು, ನಮ್ಮತ್ತೆ ನನಗೆ ಹೊಡೆಯುತ್ತಿದ್ದಾರೆ” ಎಂದು ದೂರು ನೀಡುವ ನೆಪದಲ್ಲಿ ಸಹಾಯವಾಣಿ ಸಂಖ್ಯೆ ಸಕ್ರಿಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡರಲ್ಲದೆ, ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳ ಕರ್ತವ್ಯ ಪಾಲನೆ ಹಾಗೂ ಸಹಾಯವಾಣಿ ಕಾರ್ಯನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಇಲಾಖೆಯಡಿ ನಡೆಯುತ್ತಿರುವ ಅಂಗವನಾಡಿ ಕೇಂದ್ರ, ಸಾಂತ್ವನ ಕೇಂದ್ರ, ಶಿಶು ಪಾಲನಾ ಕೇಂದ್ರ, ಸ್ವೀಕಾರ ಕೇಂದ್ರ, ಬಾಲಮಂದಿರ, ವೃದ್ಧಾಶ್ರಮದ ಪ್ರಗತಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು 4199 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಂಗನವಾಡಿ ಕೇಂದ್ರದಲ್ಲಿ 6 ತಿಂಗಳಿನಿAದ 6 ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ತೀವ್ರ ಅಪೌಷ್ಟಿಕತೆಯ 353 ಮಕ್ಕಳಿದ್ದು, ಈ ಪೈಕಿ 69 ಮಕ್ಕಳನ್ನು ವೈದ್ಯರ ಶಿಫಾರಸ್ಸಿನ ಮೇರೆಗೆ ಎನ್ಆರ್ಸಿ, ಎಂಎನ್ಆರ್ಸಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ 48 ದೂರು ಪ್ರಕರಣಗಳು ಸ್ವೀಕೃತವಾಗಿದ್ದು, 46 ಪ್ರಕರಣಗಳಲ್ಲಿ ಬಾಲ್ಯವಿವಾಹವನ್ನು ತಡೆಯಲಾಗಿದೆ. ಉಳಿದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.





