ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ರಾಜ್ಯ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿ ಶುಕ್ರವಾರ ತಹಶಿಲ್ದಾರರು ಶಹಾಪುರ ರವರ ಮುಖಾಂತರ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸಚಿವರು ಪ್ರಸ್ತುತ ನಿರ್ಮಾಣ ಮಾಡುತ್ತಿರುವ ಪ್ರಜಾಸೌಧ ಕಟ್ಟಡದ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕು ಹಾಗೂ ಹಳೆಯ ತಹಸೀಲ್ದಾರ ಕಾರ್ಯಾಲಯದ ಜಾಗದಲ್ಲೇ ಪ್ರಜಾಸೌಧ ಕಟ್ಟಡ ನಿರ್ಮಿಸಿ ಸಾರ್ವಜನಿಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಂಡುವಂತೆ ಒತ್ತಾಯಿಸಿದರು.
ಮನವಿ ಸಲ್ಲಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಘಟಕ ಅಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ ಮಾತನಾಡಿ, ‘ಸಚಿವರ ಅಭಿವೃದ್ಧಿ ಕಾರ್ಯಗಳಿಗೆ ನಾವು ವಿರೋಧಿಗಳಲ್ಲ. ಆದರೆ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡುತ್ತಿರುವುದಕ್ಕೆ ನಮ್ಮ ಸ್ಪಷ್ಟ ವಿರೋಧವಿದೆ. ಶಿಕ್ಷಣ ಇಲಾಖೆಯ ಜಾಗದಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣವಾದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಅವರು, ‘ಈ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾದರೆ ಶಹಾಪುರ ನಗರದಲ್ಲಿ ತೀವ್ರ ಹೋರಾಟ ಹಾಗೂ ಆಕ್ರೋಶ ಉಂಟಾಗಲಿದೆ” ಎಂದು ಎಚ್ಚರಿಕೆ ನೀಡುವುದರ ಮುಖಾಂತರ ಮನವಿ ಸಲ್ಲಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಶರಣಪ್ಪ ಚಲವಾದಿ, ಗೌರವಾಧ್ಯಕ್ಷ ಮರೆಪ್ಪ ಹೊಸಮನಿ, ವಡಿಗೇರ ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಆಯ್ಯಾಳ (ಕೆ), ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ್ ಸುರಪುರಕರ್ ಕೊಂಗಂಡಿ ಸೇರಿದಂತೆ ದಸಂಸದ ಹಲವಾರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.





