ಅನೈತಿಕ ಸಂಬಂಧದ ಅಪವಾದ ಹೊರಿಸಿ ಮಹಿಳೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದ್ದು, ಹನ್ನೊಂದು ಮಂದಿ ಮೇಲೆ ಪ್ರಕರಣ ದಾಖಲಾಗಿದೆ.
ಈ ಘಟನೆ ಅಕ್ಟೋಬರ್ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ 35 ವರ್ಷದ ಮಹಿಳೆ ಸಂತ್ರಸ್ತೆಯಾಗಿದ್ದು, ಆಕೆಯ ತಲೆ ಬೋಳಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಚಿತ್ರಹಿಂಸೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಹಿಳೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿಯಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ಅವಳನ್ನು ಕರೆದುಕೊಂಡು ಹೋಗುತ್ತಿದ್ದ. ಈ ಹಿನ್ನೆಲೆಯಲ್ಲಿ ಆತನೊಂದಿಗೆ ಅಕ್ರಮ ಸಂಬಂಧ ಇದೆ ಎಂಬ ಅನುಮಾನದಿಂದ ಸ್ಥಳೀಯರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮಹಿಳೆಯನ್ನು ಸುಮಾರು 11 ಮಂದಿ ನೆಲಕ್ಕೆ ಒದ್ದು ಹಿಡಿದು ಕೂದಲು ಕತ್ತರಿಸಿ, ತಲೆಗೆ ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಕರ್ನಾಟಕ ಕಬ್ಬು ಬೆಳೆಗಾರರ ಸಂಘ ವತಿಯಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ
ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಧಿತರು ಕಸ್ತೂರಿಬಾಯಿ ಮತ್ತು ಡಾಕಪ್ಪ. ಇನ್ನುಳಿದ 9 ಮಂದಿ ಆರೋಪಿಗಳು ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಭಾಯಿ, ತಿಪ್ಪಿಭಾಯಿ, ರೂಪ್ಲಿಭಾಯಿ, ಅನುಸೂಯಾ, ಚಾವಳಿಭಾಯಿ ಹಾಗೂ ತಿಪ್ಪಣ್ಣ ನಾಯ್ಡ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ.
ಪರಾರಿಯಾದವರ ಪತ್ತೆಗೆ ಕೆಂಭಾವಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಥ್ವಿಕ್ ಶಂಕರ್ ತಿಳಿಸಿದ್ದಾರೆ.





