ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವುದು, ಹೊರಗುತ್ತಿಗೆ ಕಾರ್ಮಿಕರ ಸೇವೆ ಖಾಯಂಗೊಳಿಸುವುದು ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧೋದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸುವಂತೆ ಒತ್ತಾಯಿಸಿ ಯಾದಗಿರಿ ಸೇರಿದಂತೆ ರಾಜ್ಯವ್ಯಾಪಿ ಹಾಸ್ಟೆಲ್ ಕಾರ್ಮಿಕರಿಂದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಕ್ರೈಸ್ತ ಸಂಸ್ಥೆಗಳ ವ್ಯಾಪ್ತಿಯ ಸರ್ಕಾರಿ ಹಾಸ್ಟೆಲ್, ಆಶ್ರಮ ಶಾಲೆ, ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಎಐಯುಟಿಯುಸಿಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಯಾದಗಿರಿ ಆಗ್ರಹಿಸುತ್ತದೆ ಎಂದು ಮುಖಂಡರು ತಿಳಿಸಿದರು.
ಪ್ರತಿಭಟನೆಯಲ್ಲಿ ಕಾರ್ಯದರ್ಶಿ ರಾಮಲಿಂಗಪ್ಪ ಬಿ ಎನ್ ಮಾತನಾಡಿ, “ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು, ಕನಿಷ್ಠ ವೇತನ, ಪಿಎಫ್, ರಜೆ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳಿಂದಲೂ ಅವರು ವಂಚಿತರಾಗಿದ್ದಾರೆ. ಕನಿಷ್ಠ ವೇತನವನ್ನು ರೂ. 21 ಸಾವಿರಕ್ಕೆ ಹೆಚ್ಚಿಸಲು ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದರೂ ಅದು ಇನ್ನೂ ಜಾರಿಯಾಗಿಲ್ಲ. ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿರುವ ಕಾರ್ಮಿಕರಿಗೆ ಇದು ತಕ್ಷಣ ಜಾರಿಗೆ ಬರಬೇಕೆಂದು’ ಅವರು ಆಗ್ರಹಿಸಿದರು.

ಇದೆ ವೇಳೆ, ಕಾರ್ಮಿಕರಿಂದ ಇಎಸ್ಐ ಶುಲ್ಕ ವಸೂಲಿ ಮಾಡಲಾಗುತ್ತಿದ್ದರೂ ಜಿಲ್ಲಾಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಗಳ ಕೊರತೆ ಇರುವುದರಿಂದ ಕಾರ್ಮಿಕರು ಹಾಗೂ ಅವರ ಕುಟುಂಬಗಳು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಇಎಸ್ಐ ಆಸ್ಪತ್ರೆ ಸ್ಥಾಪಿಸುವಂತೆ ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ. ತೆಳಿಗೇರಿಕರ್, ಉಪಾಧ್ಯಕ್ಷ ತಾಜುದ್ದೀನ್ ಚೌಕಿ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.
ಬೇಡಿಕೆಯ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಗಳು ಸ್ವೀಕರಿಸಿ ಸರ್ಕಾರಕ್ಕೆ ಕಳುಹಿಸಲಾಗುವುದೆಂದು ಭರವಸೆ ನೀಡಿದರು.
ಎಲ್ಲ ಜಿಲ್ಲೆಗಳಲ್ಲಿ ವಿವಿಧೋದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸಬೇಕು. ಹೊರಗುತ್ತಿಗೆ ಪದ್ಧತಿ ರದ್ದು ಮಾಡಿ, ಸೇವೆಯನ್ನು ಖಾಯಂಗೊಳಿಸಬೇಕು. ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯನ್ನು ಸರ್ಕಾರಿ ಆದೇಶವಾಗಿ ಜಾರಿಗೆ ತರಬೇಕು. ಜಿಲ್ಲಾಮಟ್ಟದಲ್ಲಿ ಸುಸಜ್ಜಿತ ಇಎಸ್ಐ ಆಸ್ಪತ್ರೆ ಪ್ರಾರಂಭಿಸಿ, ಸೌಲಭ್ಯ ಮಿತಿಯನ್ನು 36 ಸಾವಿರ ಹೆಚ್ಚಿಸಬೇಕು. ಎಲ್ಲ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನವನ್ನು 36 ಸಾವಿರ ನಿಗದಿಪಡಿಸಬೇಕು. 2017ರ ನಂತರ ಪ್ರಾರಂಭವಾದ ಪ್ರತಿಯೊಂದು ವಸತಿಶಾಲೆ/ಕಾಲೇಜಿಗೆ 11 ಅಡಿಗೆ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು.





