‘ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 371(ಜೆ)ಯಡಿ ನೀಡಲಾಗಿರುವ ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕಾಗಿ ನೌಕರರ ಸಂಘಟನೆಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕಿದೆ’ ಎಂದು ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಕೆಂಬಾಳೆ ಹೇಳಿದರು.
ಶಹಾಪುರ ನಗರದ ಹಳೆಯ ಅತಿಥಿ ಗೃಹದಲ್ಲಿ ಭಾನುವಾರ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಘಟಕದಿಂದ ಆಯೋಜಿಸಲಾಗಿದ್ದ ಸಂಘಟನಾತ್ಮಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರ ಹಿತ ಕಾಯುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಈ ಸಂಘವನ್ನು ಸ್ಥಾಪಿಸಲಾಗಿದ್ದು, ನೌಕರರಿಗೆ ಸಿಗಬೇಕಾದ ಸೌಲಭ್ಯಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ನ್ಯಾಯಯುತ ಅವಕಾಶಗಳು ದೊರಕುವಂತೆ ಸರ್ಕಾರದ ಮೇಲೆ ಪ್ರಾಮಾಣಿಕ ಒತ್ತಡ ಹೇರಲಾಗುವುದು’ ಎಂದು ಅವರು ತಿಳಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಪಿಎಸ್ಐ ಹಗರಣ; ಜೈಲಲ್ಲಿ ಆರ್ ಡಿ ಪಾಟೀಲ ಮತ್ತೆ ಕಿರಿಕ್
ಸಭೆಯಲ್ಲಿ ಯಾದಗಿರಿ ಜಿಲ್ಲೆಯ ಆರು ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಐಕೂರ್, ಜಿಲ್ಲಾ ಪದಾಧಿಕಾರಿ ಶರಣು ದೊಡಮನಿ ಸೇರಿದಂತೆ ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಉಪಸ್ಥಿತರಿದ್ದರು.





