ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ತಕ್ಷಣದ ಭರ್ತಿಗೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಯಾದಗಿರಿ ನಗರದಲ್ಲಿ ಬುಧವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ನಗರದ ಸರ್ಕಾರಿ ಗ್ರಂಥಾಲಯ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ನಡೆದ ಈ ಅಭಿಯಾನದಲ್ಲಿ, ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ ಖಾಲಿ ಇರುವ 9.79 ಲಕ್ಷ ಹುದ್ದೆಗಳು ಹಾಗೂ ರಾಜ್ಯದ 43 ಇಲಾಖೆಗಳಲ್ಲಿ ಬಾಕಿ ಇರುವ 2.85 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಮುಖಂಡರು ಆಗ್ರಹಿಸಿದರು.
ಎಲ್ಲಾ ನೇಮಕಾತಿ ಪ್ರಕ್ರಿಯೆಗಳ ವಯೋಮಿತಿಯನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು, ನೇಮಕಾತಿಗಳನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು, ಅರ್ಜಿ ಶುಲ್ಕವನ್ನು ರದ್ದುಪಡಿಸಬೇಕು ಹಾಗೂ ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು. ಶಾಲೆಗಳಲ್ಲಿ ಖಾಲಿ ಇರುವ ಚಿತ್ರಕಲೆ, ಸಂಗೀತ ಹಾಗೂ ದೈಹಿಕ ಶಿಕ್ಷಕರ ಹುದ್ದೆಗಳ ಭರ್ತಿಗೂ’ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಎಐಡಿವೈಓ ರಾಜ್ಯ ಉಪಾಧ್ಯಕ್ಷ ಚನ್ನಬಸವ ಜಾನೇಕಲ್ ಮಾತನಾಡಿ, ‘ಸರ್ಕಾರಗಳು ಯುವಜನರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ಅವರ ಭವಿಷ್ಯವನ್ನು ನಿರ್ಲಕ್ಷ್ಯ ಮಾಡುತ್ತಿವೆ ಎಂದು ಆರೋಪಿಸಿದರು. ಉದ್ಯೋಗಾವಕಾಶಗಳ ಕೊರತೆಯಿಂದ ಅನೇಕ ಯುವಕರು ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಆತ್ಮಹತ್ಯೆಯಂತಹ ತೀವ್ರ ನಿರ್ಧಾರಗಳಿಗೆ’ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಮುಂದುವರೆದು ಉದ್ಯೋಗ ನೀಡದೇ, ಮತ್ತೊಂದೆಡೆ ಕುಡಿತ, ಜೂಜು ಹಾಗೂ ಮಾದಕ ವ್ಯಸನಗಳನ್ನು ಹರಡಲಾಗುತ್ತಿದೆ. ಘನತೆಯ ಬದುಕಿಗೆ ಸಾಲದ ವೇತನದಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಅತಿಥಿ ಶಿಕ್ಷಕರ ಹೆಸರಿನಲ್ಲಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಕ್ಕಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳ ಮೇಲೆ ಲಾಠಿ ಪ್ರಹಾರ ನಡೆದಿರುವುದು ಅತ್ಯಂತ ಖಂಡನೀಯ’ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಮೂಢನಂಬಿಕೆ ವಿರುದ್ಧ ವೈಜ್ಞಾನಿಕ ಜಾಗೃತಿ ಅಭಿಯಾನ
ಸಹಿ ಸಂಗ್ರಹ ಅಭಿಯಾನದಲ್ಲಿ ಸಂಘಟನೆಯ ಸದಸ್ಯರಾದ ಬಸವರಾಜ, ಆನಂದ, ಮಂಜುನಾಥ, ಹನುಮಂತ, ಮಮತಾ, ಈಶಮ್ಮ, ಈಶಪ್ಪ, ಮೌನೇಶ, ನಾಗರಾಜ್, ವೆಂಕಟೇಶ್ ಸೇರಿದಂತೆ ನೂರಾರು ಯುವಕರು ಭಾಗವಹಿಸಿ ಬೆಂಬಲ ಸೂಚಿಸಿದರು.





