ಪ್ರಸಕ್ತ ರಾಜ್ಯ ಬಜೆಟ್ನಲ್ಲಿ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಿ, ಅದಕ್ಕಾಗಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಒತ್ತಾಯಿಸಿ ಹಾಸ್ಟೆಲ್ ಕಾರ್ಮಿಕರು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದರು ಮುಖಂಡರು ಮಾತನಾಡಿ, ‘ರಾಜ್ಯದಾದ್ಯಂತ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸರ್ಕಾರಿ ಹಾಸ್ಟೆಲ್, ಆಶ್ರಮ ಶಾಲೆ ಮತ್ತು ವಸತಿ ಶಾಲೆ–ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು.
‘ಕಾರ್ಮಿಕರು ಸರ್ಕಾರಿ ಇಲಾಖೆಗಳಲ್ಲೇ ಕೆಲಸ ಮಾಡುತ್ತಿದ್ದರೂ ಕನಿಷ್ಠ ವೇತನ, ಪಿಎಫ್, ರಜೆ ಸೇರಿದಂತೆ ಅನೇಕ ಕಾನೂನುಬದ್ದ ಸೌಲಭ್ಯಗಳನ್ನು ಪಡೆಯಲು ಹರಸಾಹಸ ಪಡಬೇಕಾದ ಸ್ಥಿತಿ ಇದೆ ಎಂದು ಕಾರ್ಮಿಕರು ದೂರಿದರು. ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಕೆಲಸದ ಭದ್ರತೆ ಇಲ್ಲದೆ ದಿನನಿತ್ಯ ಅಭದ್ರತೆಯಲ್ಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದರು.
‘ಸಾವಿರಾರು ಕಾರ್ಮಿಕರು ಇದೇ ಕೆಲಸವನ್ನೇ ನಂಬಿ ಬದುಕುತ್ತಿದ್ದು, ಖಾಯಂ ಸ್ವರೂಪದ ಕೆಲಸ ಮಾಡುತ್ತಿದ್ದರೂ ಸರ್ಕಾರ ಇದುವರೆಗೆ ಅವರನ್ನು ಖಾಯಂಗೊಳಿಸಿಲ್ಲ. ಬದಲಾಗಿ ಗುತ್ತಿಗೆದಾರರ ಮೂಲಕ ಹೊಸ ಜೀತ ಪದ್ಧತಿಗೆ ನೂಕಲಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯಗಳ ಆದೇಶಗಳನ್ನು ಉಲ್ಲಂಘಿಸಿ ಕಾರ್ಮಿಕ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ’ ಎಂದು ಹೇಳಿದರು.
‘ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಿ ಎಲ್ಲಾ ಜಿಲ್ಲೆಗಳಲ್ಲಿ ವಿವಿದುದ್ದೇಶ ಕಾರ್ಮಿಕರ ಸಹಕಾರ ಸಂಘ ರಚಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದರೂ ಅದರ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎಂದು ತಿಳಿಸಿದರು. ಕೆಲ ಜಿಲ್ಲೆಗಳಲ್ಲಿ 2025ರ ಜನವರಿಯಿಂದಲೇ ಸದಸ್ಯತ್ವ ಪಡೆಯಲು ಕಾರ್ಮಿಕರು ಒಂದು ಸಾವಿರ ಪಾವತಿಸಿ ಸದಸ್ಯರಾಗಿದ್ದರೂ ಸಹಕಾರ ಸಂಘಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ’ ಎಂದು ಆರೋಪಿಸಿದರು.
‘ಇದೇ ವೇಳೆ ಗುತ್ತಿಗೆ ಕಾರ್ಮಿಕರ ಕನಿಷ್ಠ ವೇತನವನ್ನು ₹35,ಸಾವಿರ ವರೆಗೆ ಪರಿಷ್ಕರಿಸುವ ಪ್ರಸ್ತಾವನೆಯನ್ನು ಕಾರ್ಮಿಕ ಇಲಾಖೆ ಸರ್ಕಾರಕ್ಕೆ ಕಳುಹಿಸಿದ್ದರೂ ಈವರೆಗೆ ಅಂತಿಮ ನಿರ್ಧಾರವಾಗಿಲ್ಲ ಎಂದು ಹೇಳಿದರು. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಇದು ದೊಡ್ಡ ನಿರೀಕ್ಷೆಯಾಗಿತ್ತು’ ಎಂದು ತಿಳಿಸಿದರು.
‘ಕಾರ್ಮಿಕರು ಪ್ರತಿ ತಿಂಗಳು ಇಎಸ್ಐ ಶುಲ್ಕವನ್ನು ಪಾವತಿಸುತ್ತಿದ್ದರೂ ಅವರಿಗೆ ಸಮರ್ಪಕ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಅನೇಕ ಜಿಲ್ಲೆಗಳಲ್ಲಿ ಡಿಸ್ಪೆನ್ಸರಿ ಮಾತ್ರವಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ನಗರಗಳಿಗೆ ತೆರಳಬೇಕಾದ ಸ್ಥಿತಿ ಇದೆ’ ಎಂದು ದೂರಿದರು.
ಹೀಗಾಗಿ ಹೊರಗುತ್ತಿಗೆ ಕಾರ್ಮಿಕರ ಸಹಕಾರ ಸಂಘವನ್ನು ರಚಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೆ ತರಬೇಕು ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಮಾರ್ಚ್ 5ರಂದು ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ಕಲಬುರಗಿ ದಲಿತರ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ
ಈ ಸಂದರ್ಭದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷೆ ಡಿ. ಉಮಾದೇವಿ, ಸಂಘದ ಜಿಲ್ಲಾ ಅಧ್ಯಕ್ಷ ಶರಣಪ್ಪ ಜಿ. ತೆಳಿಗೇರಿಕರ್, ಜಿಲ್ಲಾ ಉಪಾಧ್ಯಕ್ಷ ತಾಜುದ್ದೀನ್ ಚೌಕಿ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಕಾಂತ್ ಚಿಕ್ಕಮೇಟಿ, ಮೋನಮ್ಮ, ಯಲ್ಲಮ್ಮ ಜಗದೇವಿ, ಹನುಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.





