ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಶಹಾಪುರ್ ತಾಲೂಕಿನ ಕನ್ಯೆಕೋಳೂರ ಸರ್ಕಾರಿ ಕಿರಿಯ ಪ್ರಾಥಮಿಕ ಅಂಬೇಡ್ಕರ್ ಶಾಲೆಯಲ್ಲಿ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ನ ಅಧ್ಯಕ್ಷ ಪ್ರಭಾಕರ ಹೊಸ್ಮನಿ ಅವರು ಮಾತನಾಡಿ, ‘ಸರ್ವೋದಯ ಟ್ರಸ್ಟ್ ಅನ್ನು 20 ಅಕ್ಟೋಬರ್ 2016ರಂದು ಸ್ಥಾಪಿಸಲಾಗಿದ್ದು, ಮಹಿಳಾ ಸಂಘಗಳ ರಚನೆ, ಬಾಲಕಾರ್ಮಿಕತೆ ತಡೆ, ಬಾಲ್ಯವಿವಾಹ ನಿರ್ಮೂಲನೆ, ಗ್ರಾಹಕರಿಗೆ ಮಾಪನ ಕುರಿತ ಅರಿವು ಮೂಡಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ’ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಲ್ಲಿಕಾರ್ಜುನ ಸಜ್ಜನ ಅವರು ಮಾತನಾಡಿ, ‘ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಟ್ರಸ್ಟ್ಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಮಕ್ಕಳ ಪಾಲಕರು ಹಾಗೂ ಗ್ರಾಮಸ್ಥರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಇನ್ನಷ್ಟು ಉತ್ತಮವಾಗುತ್ತದೆ. ಟ್ರಸ್ಟ್ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ’ ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಶ್ರೀಮತಿ ಜ್ಯೋತಿ ಮಹಾಮನಿ, ಅಂಗನವಾಡಿ ಶಿಕ್ಷಕಿ ಲಲಿತಾ ರಸ್ತಾಪುರ, ಹಣಕಾಸು ಅಧಿಕಾರಿ ನಾಗರಾಜ ದೊಡ್ಮನಿ, ಮರೆಮ್ಮ ಗೊನಾಲ್, ರೇಣುಕಾ ಆರಬೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನು ಓದಿದ್ದೀರಾ? ಕಲಬುರಗಿ | ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶಾಲೆಯ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮಕ್ಕೆ ನಾಗರಾಜ ದೊಡ್ಮನಿ ಅವರು ಸ್ವಾಗತಿಸಿ, ಲಕ್ಷ್ಮಿ ಬಡಿಗೇರ್ ಅವರು ವಂದಿಸಿದರು.





