ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಯ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ರಾಜ್ಯ ಸಮಿತಿ ವತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಮಂಗಳವಾರ ಪ್ರತಿಭಟನೆ ನಡೆಸಿದರು.
ಆರೋಪಿ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಇತರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ದಲಿತ ಯುವಕ ವಿವೇಕಾನಂದನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಮತ್ತು 4 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ‘ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಹಿಳೆಯನ್ನು ಮರ್ಯಾದೆ ಹತ್ಯೆ ಹೆಸರಿನಲ್ಲಿ ಕೊಲೆ ಮಾಡಿರುವುದು ಅತ್ಯಂತ ಕ್ರೂರ ಹಾಗೂ ಅಮಾನವೀಯ ಕೃತ್ಯವಾಗಿದೆ ಎಂದು ತೀವ್ರವಾಗಿ ಖಂಡಿಸಿದರು. ಇಂತಹ ಘಟನೆಗಳು ಸಮಾಜದ ಮಾನವೀಯ ಮೌಲ್ಯಗಳಿಗೆ ಧಕ್ಕೆ ತರುವಂತವುಗಳಾಗಿದ್ದು, ಬಸವಣ್ಣನ ಭೂಮಿಯಲ್ಲಿ ಇವು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದರು.
ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ ಶಾಲೆ ಉಳಿಸಲು ಇಟಗಾ ಕೆ ಗ್ರಾಮದಲ್ಲಿ ಪೋಷಕರ ಬೃಹತ್ ಪ್ರತಿಭಟನೆ
‘ಈ ಪ್ರಕರಣಕ್ಕೆ ಕಾರಣರಾದ ಪ್ರಕಾಶಗೌಡ ಪಾಟೀಲ್, ಪ್ರೀತಮಗೌಡ ಪಾಟೀಲ್, ಅರುಣಗೌಡ ಪಾಟೀಲ್, ಈರಪ್ಪ ಹಾಗೂ ಮುದಕಪ್ಪ ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಮರ್ಯಾದೆ ಹತ್ಯೆಗಳನ್ನು ತಡೆಯಲು ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಮತ್ತು ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಜೀಜಸಾಬ್ ಐಕೂರ್, ಮಹಾದೇವಪ್ಪ ಬಿಜಾಸಪೂರ, ಮಾನಪ್ಪ ಬಿಜಾಪೂರ, ಬಸವರಾಜ ಗೋನಾಲ, ದೇವಪ್ಪ ಗುಡ್ಡೆರ್, ಚಂದ್ರಕಾಂತ ಹಂಪಿನ್, ಮಲ್ಲಪ್ಪ ಉರುಸುಲ್, ನಿಂಗಪ್ಪ ಹಂಪಿನ್, ಉಮೇಶ್ ಲಿಂಗೇರಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.





